Select Your Language

Notifications

webdunia
webdunia
webdunia
webdunia

ಉತ್ತರಾಯಣ ಪುಣ್ಯಕಾಲದ ಶುಭದಿನ- ಮಕರ ಸಂಕ್ರಾಂತಿ

ಉತ್ತರಾಯಣ ಪುಣ್ಯಕಾಲದ ಶುಭದಿನ- ಮಕರ ಸಂಕ್ರಾಂತಿ
WD

ಅನಾದಿ ಕಾಲದಿಂದ ನಡೆದುಕೊಂಡು ಬರುತ್ತಿರುವ ಶಾಸ್ತ್ರ ಸಂಪ್ರದಾಯಗಳ ಪ್ರಕಾರ ಸೂರ್ಯನು ಧನು ರಾಶಿಯಿಂದ ಮಕರ ರಾಶಿಯನ್ನು ಪ್ರವೇಶಿಸುವುದನ್ನೇ ಮಕರ ಸಂಕ್ರಾಂತಿ ಎಂದು ಕರೆಯಲಾಗುತ್ತದೆ. ಈ ಹಬ್ಬದ ಸಮಯದಲ್ಲಿ ಶುಭಕಾರ್ಯಗಳನ್ನು ಕೈಗೊಳ್ಳುವುದು ಶ್ರೇಯಸ್ಕರ.

ಮಕರ ಸಂಕ್ರಾಂತಿಯು ಪ್ರಧಾನವಾಗಿ ಸೂರ್ಯನು ತನ್ನ ಪಥವನ್ನು ಬದಲಾಯಿಸುವುದನ್ನು ಸೂಚಿಸುವುದು ಮಾತ್ರವಲ್ಲದೆ ಉತ್ತರಾಯಣ ಪುಣ್ಯ ಕಾಲದ ಆರಂಭವೂ ಇದಾಗಿದೆ. ಮಕರ ಸಂಕ್ರಾಂತಿ ಅಥವಾ ಸಂಕ್ರಮಣದ ಅರ್ಥವು ಮಕರ ರಾಶಿಯನ್ನು ಹಾದು ಹೋಗುವುದು ಅಥವಾ ಮಕರ ರಾಶಿಗೆ ಬದಲಾಗುವುದು ಎಂಬುದಾಗಿದೆ. ಈ ಆಚರಣೆಯು ಸೂರ್ಯದೇವನ ಸಂಚಾರವನ್ನು ಗಣನೆಗೆ ತೆಗೆದುಕೊಂಡು ಆಚರಿಸಲಾಗುತ್ತಿದ್ದು ಸೂರ್ಯದೇವನು ತನ್ನ ಏಳು ಕುದುರೆಗಳಿಂದ ಎಳೆಯಲ್ಪಡುವ ಭವ್ಯ ರಥದಲ್ಲಿ ಮಕರ ರಾಶಿಗೆ ಪ್ರವೇಶಿಸುತ್ತಾನೆ ಎಂದು ಪುರಾತನ ಕಾಲದಿಂದಲೇ ಭಾರತೀಯರಲ್ಲಿ ನೆಲೆವೂರಿರುವ ವಿಶ್ವಾಸವಾಗಿದ್ದು, ಪ್ರಸ್ತುತ ರಥದ ಏಳು ಕುದುರೆಗಳು ಕಾಮನ ಬಿಲ್ಲಿನ ಏಳು ಬಣ್ಣಗಳನ್ನು ಪ್ರತಿನಿಧೀಕರಿಸುತ್ತವೆ.

ಮಕರ ರಾಶಿಗೆ ಸೂರ್ಯನ ಪ್ರವೇಶವು ಇರುಳನ್ನು ಹೋಗಲಾಡಿಸುವುದು ಮಾತ್ರವಲ್ಲದೆ ಈ ಕಾಲದಲ್ಲಿ ಸಸ್ಯಗಳ ಬೆಳವಣಿಗೆಗೂ ಸಹಕರಿಸುತ್ತದೆ. ವೇದಶಾಸ್ತ್ರದ ಪ್ರಕಾರ ಇದು ಮನಸ್ಸಿನ ಕಾರಿರುಳನ್ನು ಹೋಗಲಾಡಿಸಿ ಸ್ವ ಪ್ರಜ್ಞೆಯ ದಾರಿಯಾದ ಮೋಕ್ಷವನ್ನು ಹೊಂದಲು ಸಹಕಾರಿಯಾಗುತ್ತದೆ. ಆದುದರಿಂದಲೇ ಇದನ್ನು ಪುಣ್ಯ ಕಾಲವೆಂದು ಕರೆಯಲಾಗುತ್ತದೆ. ಈ ಕಾಲವು ಸ್ವರ್ಗದ ಬಾಗಿಲು ತೆರೆದಿರುವ ಕಾಲವೆಂದು ಚಾಲ್ತಿಯಲ್ಲಿದ್ದು, ಈ ಅವಧಿಯಲ್ಲಿ ಮರಣ ಹೊಂದುವವರು ಸ್ವರ್ಗವನ್ನು ಪಡೆಯುತ್ತಾರೆ ಎಂಬ ಐತಿಹ್ಯವಿದೆ. ಆದುದರಿಂದಲೇ ಮಹಾಭಾರತದ ಕಥೆಯಲ್ಲಿ ಭೀಷ್ಮ ಇಹಲೋಕ ತ್ಯಜಿಸಲು ಈ ಕಾಲದ ನಿರೀಕ್ಷೆಯಲ್ಲಿದ್ದದ್ದನ್ನು ನಾವು ಇಲ್ಲಿ ನೆನಪಿಸಿಕೊಳ್ಳಬಹುದು. ಈ ಕಾಲದಲ್ಲಿ ಇರುಳಿನ ಅವಧಿಯು ಕಡಿಮೆಯಿದ್ದು ಸೂರ್ಯನ ಬೆಳಕು ಸದಾ ಭೂಮಿ ಮೇಲಿರುತ್ತದೆ.

ಗ್ರಾಮೀಣ ಪ್ರದೇಶದಲ್ಲಿ ಸುಗ್ಗಿ ಹಬ್ಬವಾಗಿಯೂ ಇದನ್ನು ಆಚರಿಸಲಾಗುತ್ತದೆ. ಹೆಸರು ಬೇಳೆ, ಅಕ್ಕಿ ಮತ್ತು ಬೆಲ್ಲವನ್ನು ಸೇರಿಸಿ ತಯಾರಿಸುವ ತಿಂಡಿ (ಪೊಂಗಲ್) ಈ ದಿನದ ವಿಶೇಷ. ಮಕರ ಸಂಕ್ರಾಂತಿಯು ಭಾರತದೆಲ್ಲೆಡೆಗಳಲ್ಲಿ ವಿವಿಧ ಹೆಸರುಗಳಿಂದ ಆಚರಿಸಲ್ಪಡುತ್ತದೆ. ಪಂಜಾಬ್‌ನಲ್ಲಿ ಇದು ಲೋಹರಿ, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಬೋಗಲಿ ಬಿಹು, ಗುಜರಾತ್ ಮತ್ತು ರಾಜಸ್ತಾನದಲ್ಲಿ ಉತ್ತರಾಯಣ್ (ಗಾಳಿಪಟ ಹಾರಿಸುವ ಹಬ್ಬ), ಕರ್ನಾಟಕ, ಬಿಹಾರ, ಆಂಧ್ರ ಪ್ರದೇಶ ಮೊದಲಾದೆಡೆ ಮಕರ ಸಂಕ್ರಾಂತಿಯೆಂದೂ ತಮಿಳ್ನಾಡಿನಲ್ಲಿ ಮನೆಮನೆಗಳಲ್ಲಿ ಹಾಲನ್ನು ಉಕ್ಕಿಸುವುದರ ಮೂಲಕ "ಪೊಂಗಲ್" ಹಬ್ಬವೆಂದೂ, ಕೇರಳದ ಶಬರಿಮಲೆ ದೇವಸ್ಥಾನದಲ್ಲಿ ಮಕರ ವಿಳಕ್ಕ್ ಉತ್ಸವವಾಗಿಯೂ ಮಿಕ್ಕಿ ಉಳಿದ ರಾಜ್ಯಗಳಲ್ಲಿ ಸಂಕ್ರಾಂತಿ ಎಂದೂ ಆಚರಿಸಲ್ಪಡುತ್ತದೆ.

ತಮ್ಮ ಹೊಸ ಬೆಳೆಯಾದ ಭತ್ತ, ಕಬ್ಬು, ಎಳ್ಳು ಇತ್ಯಾದಿಗಳನ್ನು ಹೊಲಗಳಿಂದ ಮನೆಗೆ ತಂದು ಅವುಗಳನ್ನು ದಾನ ಮಾಡಿದ ನಂತರ ಸೇವಿಸುವ ಪದ್ಧತಿಯು ಪುರಾತನ ಕಾಲದಿಂದಲೇ ನಡೆದುಕೊಂಡು ಬಂದಿದೆ. ಕರ್ನಾಟಕದಲ್ಲಿ ಸಂಕ್ರಾಂತಿಗೆ ಸಂಬಂಧಪಟ್ಟ ಆಚರಣೆಗಳಲ್ಲಿ ಕಂಡು ಬರುವುದು "ಎಳ್ಳು". ಮನೆಯಲ್ಲಿ ಎಳ್ಳನ್ನು ತಯಾರಿಸಿ ಸುತ್ತ ಮುತ್ತಲಿನ ಮನೆಗೆ ಎಳ್ಳನ್ನು ಹಂಚಿ ಶುಭಾಶಯಗಳನ್ನು ಕೋರುತ್ತಾರೆ. ಈ ಸಂಪ್ರದಾಯವನ್ನು "ಎಳ್ಳು ಬೀರುವುದು" ಎಂದು ಕರೆಯುತ್ತಾರೆ. ಸಂಕ್ರಾತಿಯ ಆಚರಣೆಯಲ್ಲಿ ಎಳ್ಳು ಬೆಲ್ಲದ ಸೇವನೆಯು ಆರೋಗ್ಯಕರವಾಗಿರುತ್ತದೆ.

ಮಕರ ಸಂಕ್ರಾತಿಯ ದಿನದಂದು ಪವಿತ್ರ ಸ್ಥಳಗಳಾದ ಪ್ರಯಾಗ, ಹರಿದ್ವಾರ್, ಉಜ್ಜೈನಿ ಮತ್ತು ನಾಸಿಕ್ ಮೊದಲಾದೆಡೆಗಳಲ್ಲಿ ವಿಶೇಷ ಮೇಳಗಳು ನಡೆದು ಬರುತ್ತಿದ್ದು, 12 ವರುಷಕ್ಕೊಮ್ಮೆ ಆಚರಿಸುವ ಕುಂಭ ಮೇಳವು ಸಂಕ್ರಾತಿಯ ದಿನದಂದು ಮೇಲಿನ ಯಾವುದಾದರೊಂದು ಕ್ಷೇತ್ರಗಳಲ್ಲಿ ನೆರವೇರುತ್ತದೆ. ವರ್ಷಂಪ್ರತಿ ಚಿಕ್ಕ ಕುಂಭ ಮೇಳವೆಂದು ಕರೆಯಲ್ಪಡುವ ಮಾಘ ಮೇಳ ಪ್ರಯಾಗದಲ್ಲಿಯೂ, ಗಂಗಾಸಾಗರ ಮೇಳವು ಗಂಗಾನದಿಯಲ್ಲಿಯೂ ಮಕರ ಸಂಕ್ರಾಂತಿಯ ದಿನದಂದು ನೆರವೇರಿಸಲ್ಪಡುತ್ತದೆ.

ತಮಿಳುನಾಡಿನಲ್ಲಿ ಮತ್ತು ಆಂಧ್ರ ಪ್ರದೇಶದಲ್ಲಿ ಮಕರ ಸಂಕ್ರಾಂತಿಯು "ಪೊಂಗಲ್ " ಹಬ್ಬವೆಂದು ಮೂರು ದಿನಗಳ ಕಾಲ ಆಚರಿಸುತ್ತಿದ್ದು ತಮ್ಮ ಬೆಳೆಯ ಮೊದಲ ಕೊಯ್ಲನ್ನು ಮನೆಗೆ ತಂದು ಹೊಸ ಅಕ್ಕಿಯನ್ನು ಹಾಲಿನೊಂದಿಗೆ ಬೇಯಿಸಿ ಒಂದು ಬಗೆಯ ಸಿಹಿ ತಿಂಡಿಯಾದ 'ಚಕ್ಕರಪೊಂಗಲ್"ನ್ನು ತಯಾರಿಸುತ್ತಾರೆ. ಈ ಖಾದ್ಯವನ್ನು ಮೊದಲು ಸೂರ್ಯನಿಗೆ ಅರ್ಪಿಸಲಾಗುತ್ತಿದ್ದು ನಂತರ ಪ್ರಸಾದ ರೂಪದಲ್ಲಿ ಎಲ್ಲರಿಗೂ ವಿತರಿಸಲಾಗುತ್ತದೆ. ಜನರು ಈ ದಿನದಂದು 'ಹೊಸಅಕ್ಕಿ ಊಟ'ವನ್ನು ತಯಾರಿಸಿ ಧಾನ್ಯಲಕ್ಷ್ಮಿಯನ್ನು ಪೂಜಿಸಿ ದೇವರ ಕೃಪೆಗೆ ಪಾತ್ರರಾಗುತ್ತಾರೆ. ಮನೆ ಮುಂದೆ ವರ್ಣರಂಜಿತ "ಕೋಲಂ" ಎಂದರೆ ರಂಗೋಲಿಯನ್ನು ರಚಿಸಿ ಸಮೃದ್ಧಿಯನ್ನು ಆಹ್ವಾನಿಸುತ್ತಾ ಆಚರಿಸುವ ಈ ಹಬ್ಬವು ಸಂಪತ್ತು, ಸಮಾಧಾನ ಮತ್ತು ಏಳಿಗೆಯ ದ್ಯೋತಕವಾಗಿದೆ.

ಸೂರ್ಯನು ಮಕರ ರಾಶಿಗೆ ಪ್ರವೇಶಿಸಿ ಲೋಕದ ಕಾರಿರುಳನ್ನು ಹೋಗಲಾಡಿಸುವಂತೆ ಜನರು ಈ ಕಾಲದಲ್ಲಿ ಪುಣ್ಯ ಕಾರ್ಯಗಳಲ್ಲಿಯೂ ಆಧ್ಯಾತ್ಮಿಕ ಚಿಂತನೆಗಳಲ್ಲಿಯೂ ತಮ್ಮನ್ನು ತೊಡಗಿಸಿಕೊಂಡು ಮುಕ್ತಿ ಮಾರ್ಗದಲ್ಲಿ ಸಾಗುವಂತೆ ಈ ಆಚರಣೆಯು ಪ್ರೇರಣೆಯನ್ನು ನೀಡುತ್ತದೆ.

Share this Story:

Follow Webdunia kannada