Select Your Language

Notifications

webdunia
webdunia
webdunia
webdunia

ಸೂರ್ಯಾರಾಧನೆಯ ದ್ಯೋತಕ ರಥಸಪ್ತಮಿ

ಸೂರ್ಯಾರಾಧನೆಯ ದ್ಯೋತಕ ರಥಸಪ್ತಮಿ
, ಗುರುವಾರ, 6 ಫೆಬ್ರವರಿ 2014 (11:04 IST)
PR
ಮಾಘಮಾಸ ಶುಕ್ಲ ಪಕ್ಷದ ಸಪ್ತಮಿ ತಿಥಿಯಂದು ಸೂರ್ಯನ ಜನ್ಮದಿನ ಅಲ್ಲದೆ ಸಪ್ತಮಿ ತಿಥಿಯ ಅದಿದೇವತೆಯು ಸೂರ್ಯನೇ ಆಗಿರುವುದರಿಂದ ಇದೇ ಜನವರಿ 30ರ ಸೋಮವಾರದಂದು ಸೂರ್ಯ ಆರಾಧನೆಯ ರಥ ಸಪ್ತಮಿ ದಿನವೆಂದು ಆಚರಿಸಲಾಗುತ್ತದೆ. ಸೂರ್ಯನ ಪೂಜೆಯೇ ಈ ದಿವಸದ ಮುಖ್ಯ ಆಚರಣೆ ಈ ದಿನದಲ್ಲಿ ನಡೆಯುವ ಕೆಲಸ ಕಾರ್ಯಗಳು, ಕೋರಿಕೆಗಳು ಫಲಪ್ರದವಾಗಿರುತ್ತವೆ.

ಸೂರ್ಯನ ಪ್ರಕಾಶ ಹೆಚ್ಚುತ್ತಿರುವುದರಿಂದ ಚಳಿಗಾಲದ ಚಳಿ ಮುದುಡಿಕೊಂಡು ಮೈಯಲ್ಲಿ ನವಚೇತನ ತುಂಬಿದಂತೆನಿಸುತ್ತದೆ. ಅಂಗಾಂಗಗಳಲ್ಲಿ ಕಾರ್ಯಕ್ಷಮವಾಗುತ್ತಿವೆ. ಈ ಉಪಕಾರಕ್ಕಾಗಿ ಸೂರ್ಯನನ್ನು ಪೂಜಿಸುವುದು ರೂಡಿಯಲ್ಲಿದೆ. ಆಹಾರಕ್ಕಾಗಿ, ರೋಗ ನಿವಾರಣೆಗಾಗಿ ಸೂರ್ಯೋಪಾಸನೆ ಮಾಡಬೇಕೆಂದು ಸ್ಕಂದ, ವರಾಹ ಪುರಾಣಗಳಲ್ಲಿ ಹೇಳಿದೆ.


ಯೋಗಾಸನಗಳಲ್ಲಿ ಮೊದಲ ಪ್ರಾಶಸ್ತ್ಯ ಸೂರ್ಯನಮಸ್ಕಾರಕ್ಕೆ ನೀಡಬಹುದು. ಏಕೆಂದರೆ ಈ ಅಭ್ಯಾಸವು ಮನಸ್ಸು, ದೇಹ ಮತ್ತು ಉಸಿರಾಟ ವ್ಯವಸ್ಥೆಗಳಿಗೆ ವಿಶೇಷವಾಗಿ ಪರಿಣಾಮಕಾರಿಯಾಗಿದೆ. ಭೂಮಿಯಲ್ಲಿನ ಸಕಲ ಜೀವರಾಶಿಗಳ ಚಟುವಟಿಕೆಗಳ ಸೂರ್ಯನಿಂದ ನಡೆಯುತ್ತಿದೆ. ಸೂರ್ಯನಿಲ್ಲದೆ ಜೀವನ ಅಸ್ತಿತ್ವ ಇರಲು ಸಾಧ್ಯವಿಲ್ಲ.


ನಿಯಮಬದ್ಧವಾದ ಉದಯ ಹಾಗೂ ಅಸ್ತಗಳ ಮೂಲಕ ನಮಗೆ ಶಿಸ್ತು ಬದ್ಧವಾದ ಕರ್ತವ್ಯ ಪ್ರಜ್ಞೆಯನ್ನು, ಚೈತನ್ಯವನ್ನು ತುಂಬುವ ಸೂರ್ಯನ ಪೂಜೆಯೇ ಈ ದಿವಸದ ಮುಖ್ಯ ಆಚರಣೆಯಾಗಿದೆ. ವೈವಸ್ವತ ಮನ್ವಂತರದ ಆರಂಭದ ದಿನ. ಸೂರ್ಯನು ಉತ್ತರಾಯಣನಾಗಿ ಸಪ್ತಾಶ್ವಗಳ ರಥವನ್ನೇರಿ ಉತ್ತರದಿಕ್ಕಿನ ಮಾರ್ಗದಲ್ಲಿ ಹೊರಟ ದಿನ.


ರಥ ಸಪ್ತಮಿ ದಿವಸ ರೋಗ ನಿವಾರಣೆಯನ್ನು, ದೇಹದಾರ್ಡ್ಯ ಹಾಗೂ ಆರೋಗ್ಯವನ್ನು ಬಯಸುವವರು ಸೂರ್ಯನ ಆರಾಧನೆ ಮಾಡಬೇಕೆಂಬ ನಿಯಮವಿದೆ. ರೋಗಾಣುಗಳನ್ನು ನಾಶ ಪಡಿಸುವ ಶಕ್ತಿ ಸೂರ್ಯನ ಕಿರಣಗಳಲ್ಲಿವೆ. ಬೆಳಗಿನ ಹಾಗೂ ಸಂಜೆಯ ಸೂರ್ಯ ಕಿರಣಗಳಿಂದ ಆರೋಗ್ಯ ವರ್ಧನೆಯಾಗುತ್ತದೆ. ರೋಗದಿಂದ ನರಳುವವರು ಈ ದಿವಸ ಸೂರ್ಯಾರಾಧನೆಯನ್ನು ಮಾಡಿದರೆ ಬೇಗ ಗುಣಹೊಂದುತ್ತಾರೆ.


ರಥಸಪ್ತಮಿ ಸೂರ್ಯೋದಯಕ್ಕೆ ಸರಿಯಾಗಿ ನದಿ, ಸಮುದ್ರ, ಸರೋವರ, ಸಂಗಮ ಮುಂತಾದೆಡೆ ಸ್ನಾನ ಮಾಡಿ ಸೂರ್ಯನಿಗೆ ಶಿಅರ್ಘ್ಯಷಿ ನೀಡಿದರೆ ಪೂರ್ವ ಜನ್ಮದ ಪಾಪಗಳು ಹಾಗೂ ಈ ಜನ್ಮದ ಸಕಲ ದುಃಖಗಳು ಪರಿಹಾರವಾಗುತ್ತವೆ. ಸೂರ್ಯೋದಯಕ್ಕೆ ಮಾಡುವ ಮಾಘಸ್ನಾನ ತುಂಬಾ ಪುಣ್ಯಪ್ರದವಾದುದು. ಆಯುಷ್ಯ, ಆರೋಗ್ಯಸಂಪತ್ತು ಲಭಿಸುವುದಲ್ಲದೇ, ಸೂರ್ಯನ ಅನುಗ್ರಹ ಪ್ರಾಪ್ತಿಯಾಗುತ್ತದೆಂದು ಪುರಾಣದಲ್ಲಿದೆ. ಸೂರ್ಯನ ಆರಾಧನೆ ಋಗ್ವೇದದ ಕಾಲದಿಂದಲೂ ಪ್ರಚಲಿತದಲ್ಲಿದೆ. ಪ್ರಾಚೀನ ವೈದಿಕ ಧರ್ಮದಲ್ಲಿ ಸೂರ್ಯನಿಗೆ ಅತ್ಯಂತ ಪ್ರಾಮುಖ್ಯತೆ ಇತ್ತು. ಆತನ ಆರಾಧನೆಯಿಂದಲೇ ಸೌರ ಪಂಥ ಹುಟ್ಟಿದ್ದು. ಕಾಲ ಗಣನೆಯಲ್ಲಿ ಸೌರಮಾನ ಎಣಿಕೆ ಇಂದಿಗೂ ಇದೆ.

ಗಾಯಿತ್ರಿ ಮಂತ್ರದಲ್ಲಿನ ಪ್ರತಿಶಬ್ದವು ಸೂರ್ಯನ ಸಾಮಥ್ಯಗಳನ್ನು ಕೊಂಡಾಡುವ ಉದ್ದೇಶದಿಂದಲೇ ಬಳಸಲಾಗಿದೆ.

ದ್ವಾಪರ ಯುಗದಲ್ಲಿ ಶ್ರೀ ಕೃಷ್ಣನು ಧರ್ಮರಾಜನಿಗೆ ರಥಸಪ್ತಮಿ ಬಗ್ಗೆ ಹೇಳಿದ ಕಥೆಯಿದೆ. ಯಶೋವರ್ಮನೆಂಬ ರಾಜನಿಗೆ ಹುಟ್ಟಿದ ಮನನಿಗೆ ಹುಟ್ಟಿನಿಂದಲೇ ರೋಗಿಷ್ಠನಾಗಿದ್ದ. ಈ ಬಗ್ಗೆ ಜ್ಯೋತಿಷಿಗಳಿಂದ ವಿವರ ಪಡೆದು ಸಂಚಿತಕರ್ಮದಿಂದ ಬಂದಿರುವ ಈ ಖಾಯಿಲೆಗೆ ರಥಸಪ್ತಮಿ ವ್ರತ ಚರಿಸಲು ಹೇಳಿದ್ದರು. ಅದರಂತೆ ರಥಸಪ್ತಮಿಯ ದಿನ ಸೂರ್ಯಾರಾಧನೆ ಮಾಡಲಾಗಿ ರಾಜ ಪುತ್ರನು ಆರೋಗ್ಯವಂತನೂ, ಪ್ರಭಾವಶಾಲಿಯು ಆದನು. ಅಲ್ಲದೆ ಪಾಂಡವರು ವನವಾಸದ ಅವಧಿಯಲ್ಲಿ ಕೃಷ್ಣನ ಆದೇಶದಂತೆ ಸೂರ್ಯಾರಾಧನೆ ಮಾಡಿ ಸೂರ್ಯನಿಂದ ಅಕ್ಷಯ ಪಾತ್ರೆ ಪಡೆದಿದ್ದರು.

ಅಲ್ಲದೆ ರಾವಣನ್ನು ಗೆಲ್ಲಬೇಕಾದರೆ ಶ್ರೀರಾಮನೂ ಕೂಡ ಅಗಸ್ತ್ಯರ ಉಪದೇಶದಂತೆ ಶಿಆದಿತ್ಯಹೃದಯಷಿ ದ ಮೂಲಕ ಸೂರ್ಯನ ಆರಾಧನೆ ಮಾಡಿದನೆಂದು ರಾಮಾಯಣದಲ್ಲಿ ಹೇಳಿದೆ. ಸೂರ್ಯಾರಾಧನೆ ಮಾಡಿ, ಚಿನ್ನ ನೀಡುವ ಶಮಂತಕಮಣಿ ಪಡೆದ ಸತ್ರಾಜಿತ ಕಥೆ ಹರಿವಂಶದಲ್ಲಿ ಬಂದಿದೆ. ಮಯೂರನೆಂಬ ಕವಿ ಸೂರ್ಯಶತಕವೆಂಬ ಗ್ರಂಥ ಬರೆದು ಕಳೆದುಕೊಂಡ ಕಣ್ಣನ್ನು ಮತ್ತೆ ಪಡೆದನೆಂದು ಹೇಳುತ್ತಾರೆ.

ಶ್ರೀರಾಮ ಸೂರ್ಯವಂಶದವನಾದರೆ ಕರ್ಣ, ಸುಗ್ರೀವ, ನವಗ್ರಹಗಳಲ್ಲಿ ಶನಿ ಹಾಗೂ ಯಮ ಸೂರ್ಯನ ಪುತ್ರರಾಗಿದ್ದಾರೆ.

ವ್ಯಕ್ತಿಯ ಜನ್ಮ ಕುಂಡಲಿಯಲ್ಲಿ ಸೂರ್ಯನು ಬಲಹೀನನಾಗಿದ್ದರೆ ಅಥವಾ ಷಡ್ಬಲವಿರದಿದ್ದರೆ ರಥಸಪ್ತಮಿಯಂದು ಸೂರ್ಯಾರಾಧನೆ ಮಾಡಿದರೆ ದೋಷ ಪರಿಹಾರವಾಗುತ್ತದೆ. ಮಾಣಿಕ್ಯದ ಹರಳು ಧರಿಸಲು ಶುಭ ದಿನವಾಗಿದೆ.

ಈ ಸೂರ್ಯರಾಧನೆ ಮುಖ್ಯವಾಗಿ ಭಾರತ, ಮಧ್ಯ ಆಫ್ರಿಕಾ, ಈಜಿಪ್ಟ್‌, ಗ್ರೀಸ್ ಹಾಗೂ ಮಧ್ಯ ಏಷ್ಯಾಗಳಲ್ಲಿ ಆಚರಿಸಲಾಗುತ್ತಿದೆ

Share this Story:

Follow Webdunia kannada