Publish Date: Sun, 14 Dec 2025 (11:22 IST)
Updated Date: Sun, 14 Dec 2025 (11:30 IST)
ಕೋಲ್ಕತ್ತ: ಫುಟ್ಬಾಲ್ ದಿಗ್ಗಜ ಲಯೊನೆಲ್ ಮೆಸ್ಸಿ ಭಾಗವಹಿಸಿದ್ದ ಕಾರ್ಯಕ್ರಮ ಗೊಂದಲ ಉಂಟಾಗಿ, ಪ್ರೇಕ್ಷಕರ ಆಕ್ರೋಶಕ್ಕೆ ಕಾರಣವಾಗಿತ್ತು. ಇದೀಗ ತಿಳಿದುಬಂದಿರುವ ಮಾಹಿತಿ ಪ್ರಕಾರ ಸಾಲ್ಟ್ ಲೇಕ್ ಕ್ರೀಡಾಂಗಣಕ್ಕೆ ಭೇಟಿ ನೀಡಲು ಮುಂದಾಗಿದ್ದ ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರಿಗೆ ಪ್ರವೇಶವನ್ನು ನಿರಾಕರಿಸಲಾಗಿದೆಯೆಂದು ತಿಳಿದುಬಂದಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮೂಲಕ ಸಿಎಂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸರ್ಕಾರವು ರಾಜ್ಯಪಾಲರ ಸಾಂವಿಧಾನಿಕ ಸ್ಥಾನಕ್ಕೆ ಅವಮಾನ ಮಾಡಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಜತೆಗೆ, ಈ ಕುರಿತು ಸೂಕ್ತ ಕಾರಣ ತಿಳಿಸಬೇಕೆಂದು ಹೇಳಿದ್ದಾರೆ.
ನಾನು ಘಟನಾ ಸ್ಥಳಕ್ಕೆ ಭೇಟಿ ನೀಡದೆ, ಪರಿಶೀಲನೆ ನಡೆಸದ ಹೊರತು ಯಾವುದೇ ತೀರ್ಮಾನಕ್ಕೆ ಬರುವುದಿಲ್ಲ. ಕ್ರೀಡಾಂಗಣದಲ್ಲಿ ಏನಾಯಿತು ಎಂಬುದನ್ನು ಕಣ್ಣಾರೆ ನೋಡಲು ಬಯಸುತ್ತೇನೆ ಎಂದು ಅವರು ತಿಳಿಸಿದ್ದಾರೆ.
ರಾಜ್ಯಪಾಲರನ್ನು ಈ ರೀತಿ ನಡೆದುಕೊಳ್ಳಲು ಸಾಧ್ಯವೇ. ಇದರಿಂದ ಜನತೆ ರಬ್ಬರ್ ಸ್ಟಾಂಪ್ ಅಲ್ಲ ಎಂಬುದನ್ನು ಎಲ್ಲರೂ ಅರಿತುಕೊಳ್ಳಬೇಕೆಂಧು ಮಮತಾ ಸರ್ಕಾರ ವಿರುದ್ಧ ಬೋಸ್ ಗುಡುಗಿದ್ದಾರೆ.
ಇದು ವೈಯಕ್ತಿಕ ಅವಮಾನವಲ್ಲ, ಬದಲಾಗಿ ರಾಜ್ಯಪಾಲರ ಸಾಂವಿಧಾನಿಕ ಸ್ಥಾನಕ್ಕೆ ಮಾಡಿದ ಅವಮಾನವೆಂದರು. ವಾಸ್ತವವನ್ನು ಮರೆಮಾಚಲು ಯಾರಿಂದಲೂ ಸಾಧ್ಯವಿಲ್ಲ.ನಾನು ಖಂಡಿತವಾಗಿಯೂ ಕ್ರೀಡಾಂಗಣಕ್ಕೆ ಭೇಟಿ ನೀಡುತ್ತೇನೆ. ಪರಿಸ್ಥಿತಿಯನ್ನು ಅವಲೋಕಿಸುತ್ತೇನೆಂದರು.