ಭಾರತ ಮತ್ತು ಕ್ರಿಕೆಟ್ ಸರಣಿಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಶಿವಸೇನೆ ಮುಂಬೈನಲ್ಲಿ ಬಿಸಿಸಿಐ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದೆ. ಪಾಕ್ ಕ್ರಿಕೆಟ್ ಮಂಡಳಿ ಅಧ್ಯಕ್ಷ ಶಹರ್ ಯಾರ್ ಖಾನ್ ಮತ್ತು ಬಿಸಿಸಿಐ ಅಧ್ಯಕ್ಷ ಶಶಾಂಕ್ ಮನೋಹರ್ ನಡುವೆ ಇಂದು ಮೀಟಿಂಗ್ ನಿಗದಿಯಾಗಿತ್ತು. ಆದರೆ ಯಾವುದೇ ಕಾರಣಕ್ಕೂ ತಾವು ಭಾರತ ಮತ್ತು ಪಾಕ್ ನಡುವೆ ಕ್ರಿಕೆಟ್ ಪಂದ್ಯಕ್ಕೆ ಅವಕಾಶ ಕೊಡುವುದಿಲ್ಲ ಎಂದು ಶಿವಸೇನೆ ಕಾರ್ಯಕರ್ತರು ಹೇಳಿದ್ದಾರೆ.
ನಿಗದಿಯಾಗಿರುವ ಸಭೆಯನ್ನು ಇಂದು ನಡೆಸಬಾರದು ಎಂದೂ ಶಿವಸೇನೆ ಕಾರ್ಯಕರ್ತರು ಒತ್ತಾಯಿಸಿದರು. ಪಾಕಿಸ್ತಾನ ಭಾರತದಲ್ಲಿ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವುದರಿಂದ ಭಾರತ ಮತ್ತು ಪಾಕಿಸ್ತಾನ ನಡುವೆ ಕ್ರಿಕೆಟ್ ಪಂದ್ಯಗಳಿಗೆ ವಿರೋಧ ವ್ಯಕ್ತವಾಗಿತ್ತು. ಪಾಕಿಸ್ತಾನ ಭಾರತದ ವಿರುದ್ಧ ಎಲ್ಲಾ ಅಂತಾರಾಷ್ಟ್ರೀಯ ಪಂದ್ಯಗಳನ್ನು ಬಹಿಷ್ಕರಿಸುವುದಾಗಿ ಬೆದರಿಕೆ ಹಾಕಿತ್ತು.
ಶಶಾಂಕ್ ಮನೋಹರ್ ಶಹರ್ ಯಾರ್ ಖಾನ್ಗೆ ಕರೆ ಮಾಡಿ ಮಾತುಕತೆಗೆ ಭೇಟಿ ನೀಡುವಂತೆ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಮುಂಬೈನಲ್ಲಿ ಭೇಟಿ ನಿಗದಿಯಾಗಿತ್ತು. ಆದರೆ ಶಿವಸೇನೆ ಪ್ರತಿಭಟನೆ ಹಿನ್ನೆಲೆಯಲ್ಲಿ ಬಿಸಿಸಿಐ ಸಭೆ ರದ್ದುಮಾಡಲಾಗಿದೆ.