Publish Date: Fri, 13 May 2022 (07:18 IST)
Updated Date: Fri, 13 May 2022 (07:31 IST)
ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ವರುಣನ ಆರ್ಭಟ ಜೋರಿದೆ. ದಿನಕಳೆದಂತೆ ಸಾಂಕ್ರಾಮಿಕ ರೋಗಗಳ ಭೀತಿ ಹೆಚ್ಚಾಗಿದೆ ಹೀಗಾಗಿ ಆರೋಗ್ಯ ಇಲಾಖೆ ಮೂರು ಖಾಯಿಲೆಗಳ ಬಗ್ಗೆ ಎಚ್ಚರವಹಿಸುವಂತೆ ಸಲಹೆ ನೀಡಿದೆ.
ರಾಜ್ಯದಲ್ಲಿ ಬಿರು ಬೇಸಿಗೆ ಮಧ್ಯೆ ವರುಣನ ಆರ್ಭಟ ಹೆಚ್ಚಾಗಿದೆ ಇದರ ಮಧ್ಯೆ ಮತ್ತೊಂದು ಆತಂಕವೂ ಸೃಷ್ಟಿ ಆಗಿದೆ. ಅದೇ ಸಾಂಕ್ರಾಮಿಕ ರೋಗಗಳ ಹರಡುವ ಭೀತಿ. ಈ ಬಗ್ಗೆ ಈಗಾಗಲೇ ಆರೋಗ್ಯ ಇಲಾಖೆ ಎಚ್ಚರಿವಹಿಸುವಂತೆ ಸಾರ್ವಜನಿಕರಿಗೆ ಸೂಚಿಸಿದೆ. ಮಳೆಗಾಲ ಆರಂಭ ಹಿನ್ನೆಲೆ ಪ್ರಮುಖವಾಗಿ ಡೆಂಗ್ಯೂ, ಚಿಕನ್ ಗುನ್ಯ ಮತ್ತು ಮಲೇರಿಯಾ ಬಗ್ಗೆ ಜನರಿಗೆ ಜಾಗೃತಿ ಮೂಡಿಸುತ್ತಿದ್ದಾರೆ.
ಆರೋಗ್ಯ ಇಲಾಖೆ ಡೆಂಗ್ಯೂ, ಚಿಕನ್ ಗುನ್ಯಾ, ಮಲೇರಿಯಾ ವಿರುದ್ಧ ಮುನ್ನೆಚ್ಚರಿಕಾ ಕ್ರಮಗಳನ್ನ ಬಿಡುಗಡೆ ಮಾಡಿದೆ. ಮನೆ ಮುಂದೆ ನೀರು ನಿಂತುಕೊಳ್ಳದಂತೆ ಸ್ವಚ್ಛತೆ ಕಾಪಾಡಬೇಕು. ನಿಂತ ನೀರು ಸೊಳ್ಳೆಗಳ ಉತ್ಪತ್ತಿ ತಾಣವಾಗದಂತೆ ಕಟ್ಟೆಚ್ಚರ ವಹಿಸಬೇಕು. ನೀರು ಸಂಗ್ರಹಿಸುವ ಡ್ರಮ್ಗಳನ್ನು ಮುಚ್ಚಳದಿಂದ ಮುಚ್ಚಿಡಬೇಕು.
ನೀರು ಸಂಗ್ರಹ ತೊಟ್ಟಿ, ಡ್ರಮ್ಗಳನ್ನು ವಾರಕ್ಕೊಮ್ಮೆ ಸ್ವಚ್ಛಗೊಳಿಸಬೇಕು. ಸ್ವಯಂ ರಕ್ಷಣಾ ವಿಧಾನಗಳನ್ನ ಬಳಸಿ. ಸೊಳ್ಳೆ ಪರದೆ ಮತ್ತು ಸೊಳ್ಳೆ ನಿರೋಧಕಗಳನ್ನ ಬಳಸಬೇಕು, ಮಲೇರಿಯಾ ಮತ್ತು ಡೆಂಗ್ಯೂ ಕೇಸ್ಗಳ ಸಂಖ್ಯೆ ಹೆಚ್ಚಾಗ್ತಿದ್ದು ತಕ್ಷಣವೇ ಮುನ್ನೆಚ್ಚರಿಕಾ ಕ್ರಮ ವಹಿಸದಿದ್ದರೆ ಅಪಾಯ ಎಂದು ವೈದ್ಯರು ತಿಳಿಸಿದ್ದಾರೆ.