Publish Date: Fri, 23 Jul 2021 (07:58 IST)
Updated Date: Fri, 23 Jul 2021 (08:04 IST)
ಮುಂಬೈ (ಜು.23): ವಾಣಿಜ್ಯ ನಗರಿ ಮುಂಬೈ ಹಾಗೂ ಮಹಾರಾಷ್ಟ್ರದ ಹಲವು ಭಾಗಗಳಲ್ಲಿ ಗುರುವಾರ ಭಾರೀ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮುಂದಿನ ಮೂರು ದಿನಗಳ ಕಾಲ ಮಹಾರಾಷ್ಟ್ರದಲ್ಲಿ ಭಾರೀ ಮಳೆ ಆಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕೊಂಕಣ ಪ್ರದೇಶದಲ್ಲಿ ರೆಡ್ ಅಲರ್ಟ್ ಜಾರಿ ಮಾಡಿದೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ಮಹಾ ಸಿಎಂ ಉದ್ಧವ್ ಠಾಕ್ರೆಗೆ ದೂರವಾಣಿ ಕರೆ ಮಾಡಿ ಮಾಹಿತಿ ಪಡೆದಿದ್ದು, ರಾಜ್ಯಕ್ಕೆ ಎಲ್ಲಾ ನೆರವಿನ ಭರವಸೆ ನೀಡಿದ್ದಾರೆ.
•ವಾಣಿಜ್ಯ ನಗರಿ ಮುಂಬೈ ಹಾಗೂ ಮಹಾರಾಷ್ಟ್ರದ ಹಲವು ಭಾಗಗಳಲ್ಲಿ ಗುರುವಾರ ಭಾರೀ ಮಳೆ
•ಜನಜೀವನ ಅಸ್ತವ್ಯಸ್ತಗೊಂಡಿದೆ. ಮುಂದಿನ ಮೂರು ದಿನಗಳ ಕಾಲ ಮಹಾರಾಷ್ಟ್ರದಲ್ಲಿ ಭಾರೀ ಮಳೆ
•ಕೊಂಕಣ ಪ್ರದೇಶದಲ್ಲಿ ರೆಡ್ ಅಲರ್ಟ್ ಜಾರಿ
ಅಬ್ಬರಿಸುತ್ತಿದೆ ಮುಂಗಾರು! 12 ಜಿಲ್ಲೆಗಳಲ್ಲಿ ಭಾರೀ ಮಳೆ
ಮಹಾರಾಷ್ಟ್ರದ ಕೊಂಕಣ ಪ್ರದೇಶ ಹಾಗೂ ಕೇಂದ್ರ ಮಹಾರಾಷ್ಟ್ರದ ಹಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದೆ. ರತ್ನಗಿರಿ ಜಿಲ್ಲೆಯಲ್ಲಿ ಭೂಕುಸಿತದಿಂದ ಇಬ್ಬರು ಸಾವಿಗೀಡಾಗಿದ್ದಾರೆ. ರೈಲು ಹಳಿಗಳ ಮೇಲೆ ನೀರು ನಿಂತಿದ್ದರಿಂದ ಕೊಂಕಣ ರೈಲು ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ರೈಲುಗಳಲ್ಲಿದ್ದ ಸುಮಾರು 6 ಸಾವಿರಕ್ಕೂ ಹೆಚ್ಚು ಪ್ರಯಾಣಿಕರು ಅತಂತ್ರರಾಗಿದ್ದಾರೆ. ಭಾರೀ ಮಳೆಯ ಕಾರಣದಿಂದಾಗಿ 9 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ರತ್ನಗಿರಿ, ರಾಯಗಢ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದೆ.
ಇದೇ ವೇಳೆ ಪುಣೆಯ ಖಡಕ್ವಾಸ್ಲಾ ಅಣೆಕಟ್ಟು ತುಂಬಿ ಹರಿಯುತ್ತಿದ್ದು, ಭಾರೀ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದೆ. ಕರ್ನಾಟಕದ ಗಡಿಗೆ ಹೊಂದಿಕೊಂಡಿರುವ ಕೊಲ್ಹಾಪುರ ಜಿಲ್ಲೆಯಲ್ಲಿ ಗುರುವಾರ ಮುಂಜಾನೆ 8 ಗಂಟೆಗೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ 93 ಮಿಲಿ ಮೀಟರ್ ಮಳೆ ಆಗಿದೆ. ಸತಾರಾ ಜಿಲ್ಲೆಯಲ್ಲಿ 480 ಮಿಲಿ ಮೀಟರ್ ಮಳೆ ಸುರಿದಿದೆ.