Publish Date: Fri, 16 May 2014 (13:12 IST)
Updated Date: Fri, 16 May 2014 (14:37 IST)
ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಇದುವರೆಗೆ ಒಟ್ಟು ನಾಲ್ಕು ಕ್ಷೇತ್ರಗಳಲ್ಲಿ ಜಯಗಳಿಸಿದ್ದರೆ ಬಿಜೆಪಿ ಒಟ್ಟು 13 ಲೋಕಸಭೆ ಕ್ಷೇತ್ರಗಳಲ್ಲಿ ಜಯಗಳಿಸಿದೆ. ಜೆಡಿಎಸ್ ಪಕ್ಷದ ಅಭ್ಯರ್ಥಿ ದೇವೇಗೌಡರು ಹಾಸನ ಕ್ಷೇತ್ರದಲ್ಲಿ ಜಯಗಳಿಸುವ ಮೂಲಕ ಜೆಡಿಎಸ್ ಪಕ್ಷದ ಪರವಾಗಿ ಖಾತೆಯನ್ನು ತೆರೆದಿದ್ದಾರೆ. ಕಾಂಗ್ರೆಸ್ ಪಕ್ಷದ ಗುಲ್ಬರ್ಗ ಕ್ಷೇತ್ರದ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ, ಚಾಮರಾಜನಗರ ಕ್ಷೇತ್ರದ ಅಭ್ಯರ್ಥಿ ಆರ್. ಧ್ರುವನಾರಾಯಣ್, ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ಬಿಜೆಪಿಯ ಜನಾರ್ದನ ಸ್ವಾಮಿ ವಿರುದ್ಧ ಗೆಲುವಿನ ನಗೆ ಬೀರಿದ್ದಾರೆ.
ಗೂಳಿ ಹಟ್ಟಿ ಶೇಖರ್ ಜೆಡಿಎಸ್ ಅಭ್ಯರ್ಥಿಯಾಗಿದ್ದರು. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪಿ.ಸಿ. ಮೋಹನ್ ಅವರು ಕಾಂಗ್ರೆಸ್ ರಿಜ್ವಾನ್ ಅರ್ಷದ್ ವಿರುದ್ಧ ಜಯಗಳಿಸುವ ಮೂಲಕ ಗೆಲುವಿನ ನಗೆ ಬೀರಿದ್ದಾರೆ. ನಂದಿನಿ ಆಳ್ವ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಹೆಚ್ಚಿನ ಎಲ್ಲಾ ಕ್ಷೇತ್ರಗಳಲ್ಲೂ ಬಿಜೆಪಿ ಜಯಗಳಿಸುತ್ತಿರುವ ನಡುವೆ ಕಾಂಗ್ರೆಸ್ ಪಕ್ಷದ ಮುಖಂಡರು ಶೀತಲವಾದ ಮೌನಕ್ಕೆ ಶರಣಾಗಿದ್ದಾರೆ.
ಸಿದ್ದರಾಮಯ್ಯ, ಪರಮೇಶ್ವರ್ ಮುಂತಾದ ಮುಖಂಡರು ಈಗ ಎಲ್ಲಿದ್ದಾರೆ ಎನ್ನುವುದೇ ತಿಳಿಯುತ್ತಿಲ್ಲ ಮತ್ತು ಸಂಪರ್ಕಕ್ಕೂ ಸಿಗುತ್ತಿಲ್ಲ. ಸಿದ್ದರಾಮಯ್ಯ ಅವರು ತಮ್ಮ ಸಿಎಂ ಸ್ಥಾನವನ್ನು ಉಳಿಸಿಕೊಳ್ಳಲು ಹರಸಾಹಸ ಮಾಡಬೇಕಾಗಿದೆ. ಈ ನಡುವೆ ಬಿಜೆಪಿಯ ಅಭ್ಯರ್ಥಿಗಳು ಗೆಲುವಿನ ಸಂಭ್ರಮದಲ್ಲಿದ್ದು, ವಿಜಯೋತ್ಸವ ಆಚರಣೆಗೆ ಸಜ್ಜಾಗುತ್ತಿದ್ದಾರೆ.