Publish Date: Fri, 23 Sep 2022 (14:19 IST)
Updated Date: Fri, 23 Sep 2022 (17:22 IST)
ವಿಶ್ವಸಂಸ್ಥೆ : ರಷ್ಯಾ ಮತ್ತು ಉಕ್ರೇನ್ ನಡುವೆ ಶಾಂತಿಯನ್ನು ಸ್ಥಾಪಿಸಲು ಮಧ್ಯಸ್ಥಿಕೆ ವಹಿಸಲು ಭಾರತದ ಪ್ರಧಾನಿ ನರೇಂದ್ರ ಮೋದಿ,
ಪೋಪ್ ಫ್ರಾನ್ಸಿಸ್ ಮತ್ತು ವಿಶ್ವಸಂಸ್ಥೆಯ ಸೆಕ್ರೆಟರಿ ಜನರಲ್ ಆಂಟೋನಿಯೊ ಗುಟೆರಸ್ ಅವರನ್ನು ಒಳಗೊಂಡ ಸಮಿತಿಯನ್ನು ರಚಿಸಬೇಕು ಎಂದು ಮೆಕ್ಸಿಕೋ ವಿಶ್ವಸಂಸ್ಥೆಯಲ್ಲಿ ಪ್ರಸ್ತಾಪಿಸಿದೆ.
ನ್ಯೂಯಾರ್ಕ್ನಲ್ಲಿ ನಡೆದ ವಿಶ್ವಸಂಸ್ಥೆಯ ಸೆಕ್ಯುರಿಟಿ ಕೌನ್ಸಿಲ್ ಚರ್ಚೆಯಲ್ಲಿ ಭಾಗವಹಿಸಿದ ಮೆಕ್ಸಿಕೊದ ವಿದೇಶಾಂಗ ಸಚಿವ ಮಾರ್ಸೆಲೊ ಲೂಯಿಸ್ ಎಬ್ರಾಡ್ ಕ್ಯಾಸೌಬಾನ್ ಅವರು ಈ ಪ್ರಸ್ತಾಪವನ್ನು ಮುಂದಿಟ್ಟಿದ್ದಾರೆ.
ಇದೀಗ ಉಕ್ರೇನ್ ಹಾಗೂ ರಷ್ಯಾ ನಡುವೆ ಶಾಂತಿಯನ್ನು ಸ್ಥಾಪಿಸಲು ನಾವು ಅತ್ಯುತ್ತಮವಾದ ಪ್ರಯತ್ನವನ್ನು ಮಾಡುವುದು ಮುಖ್ಯವಾಗಿದೆ. ಇದಕ್ಕಾಗಿ ಭಾರತದ ಪ್ರಧಾನಿ ನರೇಂದ್ರ ಮೋದಿ, ಪೋಪ್ ಫ್ರಾನ್ಸಿಸ್ ಸೇರಿದಂತೆ ಇತರ ರಾಷ್ಟ್ರಗಳ ಮುಖ್ಯಸ್ಥರನ್ನು ಒಟ್ಟುಗೂಡಿಸಿ ಸಮಿತಿಯನ್ನು ಸ್ಥಾಪಿಸಬೇಕು ಎಂದು ಕ್ಯಾಸೌಬಾನ್ ವಿಶ್ವಸಂಸ್ಥೆಯಲ್ಲಿ ತಿಳಿಸಿದ್ದಾರೆ.