ಪ್ರಧಾನಿ ನರೇಂದ್ರ ಮೋದಿ ಬಲೂಚಿಸ್ತಾನ್ ಮತ್ತು ಪಾಕ್ ಆಕ್ರಮಿತ ಕಾಶ್ಮಿರದ ಬಗ್ಗೆ ಹೇಳಿಕೆ ನೀಡಿ ರೆಡ್ ಲೈನ್ ಕ್ರಾಸ್ ಮಾಡಿದ್ದಾರೆ. ಮುಂದಿನ ತಿಂಗಳು ವಿಶ್ವಸಂಸ್ಥೆಯಲ್ಲಿ ನಡೆಯಲಿರುವ ಸಾಮಾನ್ಯ ಸಭೆಯಲ್ಲಿ ಕಾಶ್ಮಿರದ ವಿಷಯವನ್ನು ಒತ್ತಾಯಪೂರ್ವಕವಾಗಿ ಪ್ರಸ್ತಾಪಿಸಲಾಗುವುದು ಎಂದು ಪಾಕಿಸ್ತಾನ ಹೇಳಿಕೆ ನೀಡಿದೆ.
ಕಳೆದ ವರ್ಷ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನದ ಪ್ರಧಾನಮಂತ್ರಿ ನವಾಜ್ ಷರೀಫ್ ಕಾಶ್ಮಿರ ವಿಷಯವನ್ನು ಪ್ರಸ್ತಾಪಿಸಿದ್ದರು. ಈ ಬಾರಿ ಕೂಡಾ ಕಾಶ್ಮಿರ ವಿಷಯವನ್ನು ಪ್ರಸ್ತಾಪಿಸಲಾಗುವುದು ಎಂದು ಪಾಕಿಸ್ತಾನದ ವಿದೇಶಾಂಗ ಸಚಿವಾಲಯದ ವಕ್ತಾರೆ ನಫೀಸ್ ಝಕಾರಿಯಾ ತಿಳಿಸಿದ್ದಾರೆ.
ವಿಶ್ವಸಂಸ್ಥೆಯ ನಿಯಮಗಳನ್ನು ಉಲ್ಲಂಘಿಸಿ ಭಾರತದ ಪ್ರಧಾನಿ ಮೋದಿ ಬಲೂಚಿಸ್ತಾನದ ಬಗ್ಗೆ ಹೇಳಿಕೆ ನೀಡಿ ರೆಡ್ ಲೈನ್ ಕ್ರಾಸ್ ಮಾಡಿದ್ದಾರೆ ಎಂದು ಜಕಾರಿಯಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭಾರತ ಬಲೂಚಿಸ್ತಾನ್ ಮತ್ತು ಕರಾಚಿಯಲ್ಲಿ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿದೆ. ಕಾಶ್ಮಿರದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯನ್ನು ಮುಚ್ಚಿಹಾಕಲು ಭಾರತ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.
ವಿಶ್ವಸಂಸ್ಥೆಗೆ ತೆರಳುವ ನಿಯೋಗದ ನೇತೃತ್ವವನ್ನು ಪ್ರಧಾನಿ ಷರೀಫ್ ವಹಿಸಿಕೊಳ್ಳಲಿದ್ದು, ಕಾಶ್ಮಿರದಲ್ಲಿ ನಡೆಯುತ್ತಿರುವ ಹಿಂಸಾಚಾರಗಳ ಬಗ್ಗೆ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಮತ್ತು ವಿಶ್ವಸಂಸ್ಥೆಯ ಸದಸ್ಯ ರಾಷ್ಟ್ರಗಳಿಗೆ ಮಾಹಿತಿ ನೀಡಲಾಗಿದೆ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವಾಲಯದ ವಕ್ತಾರೆ ನಫೀಸಾ ಜಕಾರಿಯಾ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು
ಮೊಬೈಲ್ ಆಪ್ ಡೌನ್ಲೋಡ್ ಮಾಡಿಕೊಳ್ಳಿ