Publish Date: Tue, 08 Oct 2024 (18:19 IST)
Updated Date: Tue, 08 Oct 2024 (18:23 IST)
ಬೆಂಗಳೂರು: ಚಿತ್ರದುರ್ಗಾದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ನಿರೀಕ್ಷೆಯಲ್ಲಿದ್ದ ನಟ ದರ್ಶನ್ಗೆ ಇಂದು ಕೂಡಾ ನಿರಾಸೆಯಾಗಿದೆ. ಪ್ರಕರಣದ ಎ2 ಆರೋಪಿ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಸಿದ 57ನೇ ಸಿಸಿಹೆಚ್ ಕೋರ್ಟ್ ದಿನದ ಅಂತ್ಯದ ವೇಳೆ ಅರ್ಜಿ ವಿಚಾರಣೆಯನ್ನು ಮುಂದೂಡಿದೆ.
ನಾಳೆ ಮತ್ತೇ ದರ್ಶನ್ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ.
ಪ್ರಸ್ತುತ ಬಳ್ಳಾರಿ ಜೈಲಿನಲ್ಲಿರುವ ಕೊಲೆ ಆರೋಪಿ ದರ್ಶನ್ ಜಾಮೀನು ಅರ್ಜಿಯನ್ನು ಈ ಹಿಂದೆ ಕೋರ್ಟ್ ಅ.08ಕ್ಕೆ ಮುಂದೂಡಿತ್ತು. ದರ್ಶನ್ ಜತೆಗೆ ಎ1 ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿಯನ್ನು ಸಹ ಮುಂದೂಡಿಕೆ ಮಾಡಿತ್ತು. ಅದರಂತೆಯೇ ಇಂದು ದರ್ಶನ್ , ಪವಿತ್ರ ಗೌಡ ಅವರ ಅರ್ಜಿ ವಿಚಾರಣೆ ನಡೆದಿದೆ.
ಇದೀಗ ವಾದ ಪ್ರತಿವಾದ ಆಲಿಸಿದ ಕೋರ್ಟ್ ನಾಳೆಗೆ ಅರ್ಜಿ ವಿಚಾರಣೆಯನ್ನು ಮುಂದೂಡಿದೆ.
ಅಕ್ಟೋಬರ್ ಮೂರು, ನಾಲ್ಕು, ಐದರಂದು ನಡೆದ ವಿಚಾರಣೆಯಲ್ಲಿ ದರ್ಶನ್ ಪರ ಹಿರಿಯ ವಕೀಲರಾದ ಸಿವಿ ನಾಗೇಶ್, ಪವಿತ್ರಾ ಪರ ವಕೀಲರು ತನಿಖೆಯಲ್ಲಿ ಹಲವು ಲೋಪದೋಷಗಳಗೆ ಹೇಳಿದ್ದರು. ಇನ್ನೂ ದರ್ಶನ್ ಪರ ವಕೀಲ ಸಿವಿ ನಾಗೇಶ್ ಅವರು ಈ ಪ್ರಕರಣದಲ್ಲಿ ಪೊಲೀಸರೇ ಸಾಕ್ಷ್ಯಗಳನ್ನು ಸೃಷ್ಟಿ ಮಾಡಿದ್ದಾರೆ ಎಂದು ಆರೋಪ ಮಾಡಿದ್ದರು.
ಇದಕ್ಕೆ ಇಂದು ಪ್ರತಿವಾದ ಮಂಡಿಸಿದ ಎಸ್ಪಿಪಿ ಪ್ರಸನ್ನ ಕುಮಾರ್ ಅವರು ಆರೋಪಿಗಳ ಪರ ವಕೀಲರು ಎತ್ತಿರುವ ಪ್ರತಿ ಪ್ರಶ್ನೆಗೂ ಉತ್ತರವಿದೆ ಎಂದು ಹೇಳಿದರು. ಮಾತ್ರವಲ್ಲದೆ, ದರ್ಶನ್ ಹಾಗೂ ಅವರ ತಂಡ ರೇಣುಕಾ ಸ್ವಾಮಿ ಮೇಲೆ ಹಲ್ಲೆ ಮಾಡಿದ ರೀತಿ, ಆ ನಂತರ ನಡೆದ ಘಟನೆಗಳು, ಪ್ರತ್ಯಕ್ಷದರ್ಶಿಗಳು ನೀಡಿರುವ ಹೇಳಿಕೆ ಎಲ್ಲವನ್ನೂ ಉಲ್ಲೇಖಿಸಿದ ಅವರು 'ಇದು ದರ್ಶನ್ ರಕ್ತಚರಿತ್ರೆ' ಎಂದು ಟೀಕೆ ಮಾಡಿದರು.