ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಉಗ್ರನಿಗೆ ರಾಜಾತಿಥ್ಯ ವಿಡಿಯೋ ರಿಲೀಸ್ ಮಾಡಿದ ವಿಚಾರವಾಗಿ ನಟ ದರ್ಶನ್ ಆಪ್ತ ಧನ್ವೀರ್ ಇದೀಗ ಸಿಸಿಬಿ ಪೊಲೀಸ್ ವಿಚಾರಣೆ ಎದುರಿಸಿದ್ದಾರೆ.
ಈಚೆಗೆ ಸಾಮಾಜಿಕ ಜಾಲತಾಣದಲ್ಲಿ ಪರಪ್ಪನ ಅಗ್ರಹಾರದಲ್ಲಿ ಐಸಿಸ್ ಉಗ್ರ ಜುಹಾದ್ ಹಮೀದ್ ಶಕೀಲ್ ಮನ್ನಾ ಹಾಗೂ ವಿಕೃತ ಕಾಮಿ ಉಮೇಶ್ ರೆಡ್ಡಿ ಸೇರಿ ಹಲವರಿಗೆ ಮೊಬೈಲ್ ಫೋನ್, ಟಿವಿ ಸೇರಿದಂತೆ ರಾಜಾತಿಥ್ಯ ನೀಡಿರುವ ವಿಡಿಯೋ ಬಿಡುಗಡೆಯಾಗಿತ್ತು.
ಈ ವಿಡಿಯೋ ವೈರಲ್ ಆಗುತ್ತಿದ್ದ ಹಾಗೇ ದರ್ಶನ್ ಆಪ್ತ ನಟ ಧನ್ವೀರ್ಗೆ ಇದೀಗ ಸಂಕಷ್ಟ ಎದುರಾಗಿದೆ. ಈ ವಿಡಿಯೋವನ್ನು ಧನ್ವೀರ್ ಬಿಡುಗಡೆ ಮಾಡಿದ್ದಾರೆಂದು ಅನುಮಾನ ವ್ಯಕ್ತವಾದ ಹಿನ್ನೆಲೆ, ವಿಚಾರಣೆಗೆ ಒಳಪಡಿಸಲಾಗಿದೆ.
ಭಾನುವಾರದಿಂದ ಪೊಲೀಸರು ವಿಚಾರಣೆ ನಡೆಸುತ್ತಿದ್ದು ಧನ್ವೀರ್ ಅವರ ಮೊಬೈಲ್ ಅನ್ನು ವಶಕ್ಕೆ ಪಡೆದು ವಿಧಿ ವಿಜ್ಞಾನ ಪ್ರಯೋಗಾಲಕ್ಕೆ ಕಳುಹಿಸಲಾಗಿದೆ.
ಅನುಮಾನದ ಮೇರೆಗೆ ಧನ್ವೀರ್ ಅವರನ್ನು ಸಿಸಿಬಿ ಡ್ರಿಲ್ ಮಾಡುತ್ತಿದ್ದು ಸೋಮವಾರ ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ.
ದರ್ಶನ್ಗೆ ದಿಂಬು, ಹಾಸಿಗೆ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ದರ್ಶನ್ ಪರ ವಕೀಲರು ಬೇರೆ ಕೈದಿಗಳಿಗೆ ಜೈಲಿನಲ್ಲಿ ವಿಶೇಷ ಸವಲತ್ತುಗಳನ್ನು ಪಡೆಯುತ್ತಿದ್ದಾರೆ. ಆದರೆ ದರ್ಶನ್ ಅವರಿಗೆ ಸವಲತ್ತುಗಳು ಸಿಗುತ್ತಿಲ್ಲ ಎಂದು ವಾದ ಮಂಡಿಸಿದ್ದರು.