ಬೆಂಗಳೂರು: ಸ್ಯಾಂಡಲ್ವುಡ್ನ ಖ್ಯಾತ ನಿರ್ದೇಶಕ ಜೋಗಿ ಪ್ರೇಮ್ ಅವರು ಎಮ್ಮೆ ಖರೀದಿಸಲು ಹೋಗಿ ಮೋಸಗೊಂಡು ಲಕ್ಷಗಟ್ಟಲೆ ಹಣ ಕಳೆದುಕೊಂಡಿದ್ದಾರೆ.
ಪ್ರಾಣಿಪ್ರೇಮಿಯಾಗಿರುವ ಪ್ರೇಮ್ ಅವರಿಂದ ₹4.50 ಲಕ್ಷ ಪಡೆದು ವಂಚಿಸಲಾಗಿದ್ದು, ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ಗುಜರಾತ್ನ ವಘೇಲಾ ವನರಾಜ್ ಭಾಯ್ ಎಂಬಾತನ ವಿರುದ್ಧ ಈ ಸಂಬಂಧ ಪ್ರಕರಣ ದಾಖಲಾಗಿದೆ. ಪ್ರೇಮ್ ಅವರ ವ್ಯವಸ್ಥಾಪಕ ದಶಾವರ ಚಂದ್ರು ಅವರು ನೀಡಿದ್ದರು.
ತನ್ನ ಡೈರಿ ಫಾರ್ಮ್ಗೆ ಪ್ರೇಮ್ ಅವರು ಗುಜರಾತ್ನಿಂದ ಎಮ್ಮೆಗಳನ್ನು ಖರೀದಿಸಲು ನಿರ್ಧರಿಸಿದ್ದರು. ಈ ನಡುವೆ ವಘೇಲಾ ವನರಾಜ್ ಭಾಯ್ ಎಂಬಾತನ ಪರಿಚಯವಾಗಿತ್ತು. ಎಮ್ಮೆಗಳ ಖರೀದಿ ಸಂಬಂಧ ವನರಾಜ್ ಜತೆ ಮಾತುಕತೆ ನಡೆಸಿದ್ದ ಪ್ರೇಮ್ ಅವರು, ಆತನಿಗೆ ಮುಂಗಡವಾಗಿ ಜುಲೈನಲ್ಲಿ ₹25 ಸಾವಿರ ಪಾವತಿಸಿದ್ದರು. ಬಳಿಕ ಆತನ ಬ್ಯಾಂಕ್ ಖಾತೆಗೆ ಹಂತ ಹಂತವಾಗಿ ₹ 4.50 ಲಕ್ಷ ವರ್ಗಾಯಿಸಿದ್ದರು ಎಂದು ದಶಾವರ ಚಂದ್ರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಹಣ ಪಡೆದ ನಂತರ ವನರಾಜ್ ಭಾಯ್ ಎಮ್ಮೆಗಳನ್ನು ನೀಡದೇ ಹಣದೊಂದಿಗೆ ನಾಪತ್ತೆಯಾಗಿದ್ದಾನೆ. ಒಂದು ವಾರದಲ್ಲಿ ಎಮ್ಮೆಗಳನ್ನು ನೀಡುತ್ತೇನೆ ಎಂದಿದ್ದ ವನರಾಜ್ ಭಾಯ್ ಹಣದೊಂದಿಗೆ ಎಸ್ಕೇಪ್ ಆಗಿದ್ದಾನೆ. ಈಗ ಆತನ ಫೋನ್ ಸ್ವಿಚ್ ಆಫ್ ಆಗಿದ್ದು, ವಂಚನೆಗೊಳಗಾಗಿದ್ದೇನೆ ಎಂದು ಅರಿತ ಪ್ರೇಮ್ ದೂರು ದಾಖಲಿಸಿದ್ದಾರೆ.
ಜೋಗಿ ಪ್ರೇಮ್ ತಮ್ಮ ತಾಯಿ ಭಾಗ್ಯಮ್ಮ ನಿಧನದ ಬಳಿಕ ಅವರ ಮೇಲಿನ ಅತೀವ ಪ್ರೀತಿ ಮತ್ತು ಗೌರವದಿಂದ ಮದ್ದೂರು ಬಳಿಯ ಬೆಸಗರಹಳ್ಳಿಯಲ್ಲಿ ಹತ್ತು ಎಕರೆಗೂ ಹೆಚ್ಚು ಕೃಷಿ ಜಮೀನು ಖರೀದಿಸಿ, ಅದಕ್ಕೆ ಅಮ್ಮನ ತೋಟ ಎಂದು ಹೆಸರಿಟ್ಟಿದ್ದಾರೆ. ಗುಜರಾತ್ ಎಮ್ಮೆಯನ್ನು ಖರೀದಿಸಿ ಅದನ್ನು ಅಮ್ಮನ ತೋಟದಲ್ಲಿ ಸಾಕುವ ಆಸೆ ಹೊಂದಿದ್ದರು.
ಈಗಾಗಲೇ ಹಲವು ದೇಶಿ ತಳಿಯ ಹಸುಗಳನ್ನು ತಂದು ಸಾಕುತ್ತಿದ್ದಾರೆ. ಆದರೆ, ಇದೀಗ ಎಮ್ಮೆ ಖರೀದಿಸಲು ಹೋಗಿ ಮೋಸ ಹೋಗಿದ್ದಾರೆ.