ನವದೆಹಲಿ: ನಟಿ ರನ್ಯಾ ರಾವ್ ಒಳಗೊಂಡ ಅಕ್ರಮ ಚಿನ್ನಸಾಗಾಟ ಪ್ರಕರಣ ಸಂಬಂಧ ಮಾರ್ಚ್ 10 ರಂದು ಬಂಧಿಸಲ್ಪಟ್ಟ ತೆಲುಗು ನಟ ತರುಣ್ ಕೊಂಡೂರು ರಾಜು ಅವರ ಜಾಮೀನು ಅರ್ಜಿಯನ್ನು ಬೆಂಗಳೂರಿನ ವಿಶೇಷ ನ್ಯಾಯಾಲಯ ಬುಧವಾರ ನಿರಾಕರಿಸಿದೆ.
ಈ ಪ್ರಕರಣದ ಎರಡನೇ ಆರೋಪಿಯಾಗಿರುವ ತರುಣ್ ರಾಜು ಅವರ ಜಾಮೀನು ಅರ್ಜಿಯನ್ನು ಆರ್ಥಿಕ ಅಪರಾಧಗಳ ನ್ಯಾಯಾಲಯ ತಿರಸ್ಕರಿಸಿದೆ. ಬಿಡುಗಡೆಯಾದರೆ ಅವರು ದೇಶದಿಂದ ಪಲಾಯನ ಮಾಡಲು ಪ್ರಯತ್ನಿಸಬಹುದು ಎಂದು ವಾದಿಸಿ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ಐ) ಅವರ ಜಾಮೀನಿಗೆ ವಿರೋಧ ವ್ಯಕ್ತಪಡಿಸಿತು. ರನ್ಯಾ ರಾವ್ ಬಂಧನದ ನಂತರ ರಾಜು ದೇಶವನ್ನು ತೊರೆಯಲು ಪ್ರಯತ್ನಿಸಿದ್ದಾರೆ ಎಂದು ಸಂಸ್ಥೆ ಗಮನಸೆಳೆದಿದೆ, ಇದರಿಂದಾಗಿ ಅವರ ವಿರುದ್ಧ ಲುಕ್ ಔಟ್ ಸುತ್ತೋಲೆ ಹೊರಡಿಸಲಾಗಿದೆ.
ಭಾರತದೊಳಗೆ ಚಿನ್ನದ ಸಾಗಣೆ ಮತ್ತು ವಿತರಣೆಯ ಲಾಜಿಸ್ಟಿಕ್ಸ್ ಅನ್ನು ನಿರ್ವಹಿಸುವ ಮೂಲಕ ಕಳ್ಳಸಾಗಣೆ ಕಾರ್ಯಾಚರಣೆಯನ್ನು ಸುಗಮಗೊಳಿಸುವಲ್ಲಿ ರಾಜು ನಿರ್ಣಾಯಕ ಪಾತ್ರ ವಹಿಸಿದ್ದಾರೆ ಎಂದು ಅಧಿಕಾರಿಗಳು ಆರೋಪಿಸಿದ್ದಾರೆ.
ಕನ್ನಡದ ನಟಿ ರನ್ಯಾ ರಾವ್ ಎಂದೂ ಕರೆಯಲ್ಪಡುವ ಹರ್ಷವರ್ಧಿನಿ ರನ್ಯಾ ಅವರನ್ನು ಮಾರ್ಚ್ 3 ರಂದು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಯಿತು. ಅಧಿಕಾರಿಗಳು ಅವರ ಬಳಿಯಿಂದ 12.56 ಕೋಟಿ ರೂ. ಮೌಲ್ಯದ 14.2 ಕೆಜಿ ವಿದೇಶಿ ಮೂಲದ ಚಿನ್ನದ ಗಟ್ಟಿಗಳನ್ನು ವಶಪಡಿಸಿಕೊಂಡಿದ್ದಾರೆ. ಅವರು ಕರ್ನಾಟಕ ಐಪಿಎಸ್ ಅಧಿಕಾರಿ ಡಿಜಿಪಿ ಕೆ. ರಾಮಚಂದ್ರ ರಾವ್ ಅವರ ಮಲಮಗಳು.
ರನ್ಯಾ, ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ ಡಿಜಿಪಿ ದರ್ಜೆಯ ಅಧಿಕಾರಿ ಕೆ. ರಾಮಚಂದ್ರ ರಾವ್ ಅವರ ಮಲಮಗಳು.
ಆಕೆಯ ಬಂಧನದ ನಂತರ, ಆಕೆಯ ನಿವಾಸದಲ್ಲಿ ನಡೆದ ದಾಳಿಯಲ್ಲಿ 2.06 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳು ಮತ್ತು 2.67 ಕೋಟಿ ರೂ. ನಗದು ಪತ್ತೆಯಾಗಿದೆ.