Publish Date: Wed, 30 Jul 2025 (15:12 IST)
Updated Date: Wed, 30 Jul 2025 (15:14 IST)
ಹೈದರಾಬಾದ್: ಆನ್ಲೈನ್ ಬೆಟ್ಟಿಂಗ್ ಆ್ಯಪ್ಗಳ ವಿರುದ್ಧದ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ನಟ ಪ್ರಕಾಶ್ ರಾಜ್ ಅವರು ಇಂದು ಜಾರಿ ನಿರ್ದೇಶನಾಲಯದ ವಿಚಾರಣೆಗೆ ಬುಧವಾರ ಹಾಜರಾಗಿದ್ದಾರೆ.
ತಮ್ಮ ವಕೀಲರೊಂದಿಗೆ ನಟ ಪ್ರಕಾಶ್ ರಾಜ್ ಅವರು ಹೈದರಾಬಾದ್ನ ಬಶೀರ್ಬಾಗ್ನಲ್ಲಿರುವ ಇಡಿ ಕಚೇರಿಗೆ ಬಂದಿದ್ದು, ವಿಚಾರಣೆಗೆ ಹಾಜರಾಗಿದ್ದಾರೆ ಎಂದು ವರದಿಯಾಗಿದೆ.
ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನಟ ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್ ಸೇರಿ 29 ಖ್ಯಾತನಾಮರ ವಿರುದ್ಧ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿಕೊಂಡಿತ್ತು. ಬಳಿಕ ಪ್ರತ್ಯೇಕ ದಿನಾಂಕಗಳಂದು ವಿಚಾರಣೆಗೆ ಹಾಜರಾಗುವಂತೆ ಜುಲೈ 10ರಂದು ಸಮನ್ಸ್ ಜಾರಿ ಮಾಡಿತ್ತು.
ಇನ್ನೂ ಈ ಪ್ರಕರಣದಲ್ಲಿ ನಟಿ ಮಂಚು ಲಕ್ಷ್ಮಿ, ನಿಧಿ ಅಗರ್ವಾಲ್, ಪ್ರಣೀತಾ ಸುಭಾಶ್, ಅನನ್ಯಾ ನಾಗಲ್ಲಾ, ಟಿ.ವಿ ನಿರೂಪಕಿ ಶ್ರೀಮುಖಿ ಹಾಗೂ ತೆಲಂಗಾಣದ ಸಾಮಾಜಿಕ ಜಾಲತಾಣಗಳ ಇನ್ಫ್ಲುಯೆನ್ಸರ್ಗಳು, ಯೂಟ್ಯೂಬರ್ಗಳ ವಿರುದ್ಧವೂ ಪ್ರಕರಣ ದಾಖಲಾಗಿದೆ.
ಈ ಆ್ಯಪ್ಗಳು ಅಕ್ರಮ ಬೆಟ್ಟಿಂಗ್ ಮತ್ತು ಜೂಜಾಟದಿಂದ ಕಾನೂನು ಬಾಹಿರವಾಗಿ ಕೋಟ್ಯಂತರ ರೂಪಾಯಿ ಗಳಿಸಿವೆ ಎಂಬ ಆರೋಪವಿದೆ ಎಂದು ಮೂಲಗಳು ಹೇಳಿವೆ.
ಐದು ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಎಫ್ಐಆರ್ಗಳನ್ನು ಗಮನದಲ್ಲಿಟ್ಟುಕೊಂಡು ಜಾರಿ ನಿರ್ದೇಶನಾಲಯವು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಪ್ರಕರಣ ದಾಖಲಿಸಿದೆ.