Publish Date: Sat, 17 Aug 2024 (09:19 IST)
Updated Date: Sat, 17 Aug 2024 (09:22 IST)
ಬೆಂಗಳೂರು: ನಟ ದರ್ಶನ್ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಸುದ್ದಿಗೋಷ್ಠಿ ನಡೆಸಿ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಸೇರಿದಂತೆ 17 ಆರೋಪಿಗಳನ್ನು ಬಂಧಿಸಲಾಗಿದ್ದು ಎಲ್ಲರೂ ಈಗ ನ್ಯಾಯಾಂಗ ಬಂಧನದಲ್ಲಿದ್ದಾರೆ. ದರ್ಶನ್ ಆಂಡ್ ಗ್ಯಾಂಗ್ ನ್ಯಾಯಾಂಗ ಬಂಧನಕ್ಕೊಳಗಾಗಿ ಎರಡು ತಿಂಗಳಾಗುತ್ತಾ ಬಂದಿದೆ. ಇನ್ನೂ ಆರೋಪಿಗಳು ಜಾಮೀನಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗಿಲ್ಲ.
ಅದಕ್ಕೆ ಕಾರಣ ಪೊಲೀಸರು ಇನ್ನೂ ಚಾರ್ಜ್ ಶೀಟ್ ಸಲ್ಲಿಕೆ ಮಾಡದೇ ಇರುವುದು. ಪೊಲೀಸರು ಈಗಾಗಲೇ ಶೇ.70 ರಷ್ಟು ಸಾಕ್ಷ್ಯ ಸಂಗ್ರಹ ಮಾಡಿದ್ದಾರೆ. ಉಳಿದ 30 ಶೇಕಡಾ ಎಫ್ ಎಸ್ಎಲ್ ವರದಿ ಹೈದರಾಬಾದ್ ನಿಂದ ಬರಬೇಕಿದೆ. ಇದಾದ ಬಳಿಕ ತನಿಖೆ ನಡೆಸಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಿದ್ದೇವೆ ಎಂದು ಬಿ ದಯಾನಂದ್ ಮಾಹಿತಿ ನೀಡಿದ್ದಾರೆ.
ದರ್ಶನ್ ಮತ್ತು ಗ್ಯಾಂಗ್ ನ ಮೊಬೈಲ್ ಗಳನ್ನು ವಶಪಡಿಸಿಕೊಂಡಿದ್ದ ಪೊಲೀಸರು ಅದನ್ನು ಎಫ್ಎಸ್ಎಲ್ ವರದಿಗಾಗಿ ಹೈದರಾಬಾದ್ ಗೆ ಕಳುಹಿಸಿಕೊಟ್ಟಿದ್ದರು. ಇದೀಗ ಈ ವರದಿ ಇನ್ನಷ್ಟೇ ಬರಬೇಕಿದೆ. ಡಿಜಿಟಲ್ ಸಾಕ್ಷ್ಯ ಪ್ರಕರಣದಲ್ಲಿ ಮಹತ್ವದ್ದಾಗಿದೆ. ಹೀಗಾಗಿ ಇದು ಬಂದ ಬಳಿಕವಷ್ಟೇ ತನಿಖೆಯ ವರದಿಯನ್ನು ಸಲ್ಲಿಸಲಿದ್ದೇವೆ ಎಂದು ದಯಾನಂದ್ ಹೇಳಿದ್ದಾರೆ.