Publish Date: Fri, 29 Sep 2023 (09:10 IST)
Updated Date: Fri, 29 Sep 2023 (09:25 IST)
ಬೆಂಗಳೂರು: ತಮಿಳು ಸಿನಿಮಾ ಚಿಕ್ಕು ಪ್ರಚಾರಕ್ಕೆ ಬೆಂಗಳೂರಿಗೆ ಬಂದಿದ್ದ ನಟ ಸಿದ್ಧಾರ್ಥ್ ರ ಪತ್ರಿಕಾಗೋಷ್ಠಿಗೆ ಕರವೇ ಕಾರ್ಯಕರ್ತರು ಅಡ್ಡಿಪಡಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ನಟ ಪ್ರಕಾಶ್ ರಾಜ್ ಟ್ವೀಟ್ ಮಾಡಿ ಕನ್ನಡಿಗರ ಪರವಾಗಿ ಕ್ಷಮಿಸಿ ಎಂದಿದ್ದಾರೆ.
ತಮಿಳು ಸಿನಿಮಾ ಚಿಕ್ಕು ಕನ್ನಡದಲ್ಲೂ ಬಿಡುಗಡೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ನಾಯಕ ನಟ ಸಿದ್ಧಾರ್ಥ್ ಮಲ್ಲೇಶ್ವರದಲ್ಲಿ ಪತ್ರಿಕಾಗೋಷ್ಠಿ ನಡೆಸುತ್ತಿದ್ದರು. ಈ ವೇಳೆ ಕರವೇ ಕಾರ್ಯಕರ್ತರು ಬಂದು ಕಾರ್ಯಕ್ರಮ ಸ್ಥಗಿತಗೊಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಕಾಶ್ ರಾಜ್ ಹೌದು. ಕಾವೇರಿ ನಮ್ಮದೇ. ಆದರೆ ದಶಕಗಳ ಈ ಸಮಸ್ಯೆಯನ್ನು ಪರಿಹರಿಸಲಾಗದ ಎಲ್ಲಾ ಅಸಮರ್ಥ ರಾಜಕೀಯ ಪಕ್ಷಗಳನ್ನು, ನಾಯಕರನ್ನು ಪ್ರಶ್ನಿಸದೇ, ಕೇಂದ್ರದ ಮೇಲೆ ಒತ್ತಡ ತರದ ನಾಲಾಯಕ್ ಸಂಸದರನ್ನು ತರಾಟೆಗೆ ತೆಗೆದುಕೊಳ್ಳದೇ, ಹೀಗೆ ಅಸಹಾಯಕ ಜನಸಾಮಾನ್ಯರನ್ನು, ಕಲಾವಿದರನ್ನು ಹಿಂಸಿಸುವುದು ತಪ್ಪು. ಒಬ್ಬ ಕನ್ನಡಿಗನಾಗಿ ಸಹೃದಯ ಕನ್ನಡಿಗರ ಪರವಾಗಿ ಕ್ಷಮಿಸಿ ಎಂದು ಸಿದ್ಧಾರ್ಥ್ ಗೆ ಹೇಳಿದ್ದಾರೆ.