Publish Date: Tue, 16 Nov 2021 (08:31 IST)
Updated Date: Tue, 16 Nov 2021 (08:34 IST)
ನಟ ಪುನೀತ್ ರಾಜ್ಕುಮಾರ್ ಅವರಿಗೆ ಚಿತ್ರರಂಗದ ಪರವಾಗಿ ನಮನ ಸಲ್ಲಿಸುವ ಉದ್ದೇಶದಿಂದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಇಂದು (ನವೆಂಬರ್ 16) ಪುನೀತ ನಮನ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಕನ್ನಡ ಚಿತ್ರರಂಗದ ಎಲ್ಲಾ ಗಣ್ಯರು ಭಾಗವಹಿಸಬೇಕು ಎಂಬ ಉದ್ದೇಶದಿಂದ ಇಂದು, ಚಿತ್ರ ಪ್ರದರ್ಶನ ಹೊರತುಪಡಿಸಿ, ಚಿತ್ರೋದ್ಯಮದ ಮತ್ತೆಲ್ಲಾ ಕೆಲಸಗಳಿಗೆ ರಜೆ ಘೋಷಿಸಲಾಗಿದೆ.
ಸ್ಯಾಂಡಲ್ವುಡ್ನ 142 ಕಲಾವಿದರಿಗೆ ಆಹ್ವಾನ ನೀಡಲಾಗಿದ್ದು, ಪರಭಾಷೆಯ 40 ಕ್ಕೂ ಹೆಚ್ಚು ಕಲಾವಿದರು ಪುನೀತ ನಮನಕ್ಕೆ ಬರಲಿದ್ದಾರೆ. ಪುನೀತ್ ಎಲ್ಲಾ ನಟರ ಜೊತೆ ಅನ್ಯೋನ್ಯವಾಗಿದ್ದರು. ಆದ್ದರಿಂದಲೇ ಕನ್ನಡದ ಎಲ್ಲಾ ನಟರು ಆಗಮಿಸುವ ನಿರೀಕ್ಷೆ ಇದೆ. ಸುದೀಪ್, ಯಶ್, ಗಣೇಶ್, ಉಪೇಂದ್ರ, ರವಿಚಂದ್ರನ್, ಶ್ರೀಮುರಳಿ, ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ, ಧ್ರುವ ಸರ್ಜಾ ಸೇರಿದಂತೆ ಕನ್ನಡದ ಎಲ್ಲಾ ಕಲಾವಿದರು ಭಾಗಿ ಆಗಲಿದ್ದು, ಪುನೀತ್ ಜೊತೆ ನಟಿಸಿದ ಎಲ್ಲಾ ನಾಯಕಿಯರು, ಹಿರಿಯ ಕಲಾವಿದರು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ರಾಜಕೀಯ ರಂಗದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಇಡೀ ಸಚಿವ ಸಂಪುಟ ಭಾಗವಹಿಸಲಿದೆ. ಮೈಸೂರಿನ ಮಹಾರಾಜ ಯದುವೀರ್ ಕೂಡ ಬರಲಿದ್ದಾರೆ.
ದಕ್ಷಿಣ ಭಾರತ ಚಿತ್ರರಂಗದ ಸ್ಟಾರ್ಗಳಾದ ನಟ ವಿಶಾಲ್, ರಜನಿಕಾಂತ್, ದಳಪತಿ ವಿಜಯ್, ಅಜಿತ್, ವಿಜಯ್ ಸೇತುಪತಿ, ಚಿರಂಜೀವಿ, ಅಲ್ಲು ಅರ್ಜುನ್, ಜ್ಯೂ. ಎನ್ಟಿಆರ್, ಪ್ರಭಾಸ್, ರಾಮ್ ಚರಣ್, ಮೋಹನ್ ಲಾಲ್ ಸೇರಿದಂತೆ ಪ್ರಮುಖ ಕಲಾವಿದರು ಭಾಗವಹಿಸುವ ಸಾಧ್ಯತೆ ಇದೆ. ಬಾಲಿವುಡ್ ದಿಗ್ಗಜ ಅಮಿತಾಭ್ ಬಚ್ಚನ್ ಕೂಡ ಬರಲಿದ್ದಾರೆ ಎಂಬ ನಿರೀಕ್ಷೆ ಇದೆ.