Publish Date: Mon, 12 Aug 2024 (12:16 IST)
Updated Date: Mon, 12 Aug 2024 (12:18 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನವಾಗಿ ಇಷ್ಟು ದಿನವಾಗಿದ್ದರೂ ನಟ ದರ್ಶನ್ ಇದುವರೆಗೆ ಜಾಮೀನಿಗೆ ಅರ್ಜಿ ಸಲ್ಲಿಸಿಲ್ಲ. ಇದಕ್ಕೆ ಕಾರಣವೇನೆಂದು ಈಗ ಬಯಲಾಗಿದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಇದುವರೆಗೆ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿಲ್ಲ. ಸಾಮಾನ್ಯವಾಗಿ ಯಾವುದೇ ಪ್ರಕರಣದ ವಿಚಾರಣೆ ನಡೆಸಿ 90 ದಿನಗಳೊಳಗೆ ಪೊಲೀಸರು ಆರೋಪಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು. ಒಂದು ವೇಳೆ ಆರೋಪಪಟ್ಟಿ ಸಲ್ಲಿಸಲು ವಿಫಲರಾದರೆ ಕೋರ್ಟ್ ಇದೇ ಕಾರಣವನ್ನಿಟ್ಟುಕೊಂಡು ಸುಲಭವಾಗಿ ಆರೋಪಿಗೆ ಜಾಮೀನು ನೀಡಬಹುದು.
ಆದರೆ ದರ್ಶನ್ ಪ್ರಕರಣದಲ್ಲಿ ಪೊಲೀಸರು ಸದ್ಯದಲ್ಲೇ ಚಾರ್ಜ್ ಶೀಟ್ ಸಲ್ಲಿಸಲಿದ್ದಾರೆ. ಚಾರ್ಜ್ ಶೀಟ್ ಸಲ್ಲಿಸಿದ ಬಳಿಕವೇ ದರ್ಶನ್ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಆದರೆ ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆ ವಿಳಂಬ ಮಾಡುತ್ತಿರುವುದರಿಂದ ದರ್ಶನ್ ಗೂ ಜಾಮೀನಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತಿಲ್ಲ.
ಇದರ ನಡುವೆ ಪೊಲೀಸರು ಸೂಕ್ತ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿಟ್ಟುಕೊಂಡು ಪ್ರಕರಣವನ್ನು ಫಾಸ್ಟ್ ಟ್ರ್ಯಾಕ್ ಕೋರ್ಟ್ ನಲ್ಲಿ ತೀರ್ಮಾನಗೊಳಿಸಲು ಒತ್ತಾಯ ಮಾಡುತ್ತಿದ್ದಾರೆ. ಒಂದು ವೇಳೆ ಪೊಲೀಸರ ಈ ಪ್ರಯತ್ನಕ್ಕೆ ಯಶಸ್ಸು ಸಿಕ್ಕರೆ ದರ್ಶನ್ ಗೆ ಇನ್ನಷ್ಟು ಸಂಕಷ್ಟ ಎದುರಾಗಬಹುದು.