Select Your Language

Notifications

webdunia
webdunia
webdunia
webdunia

ಪ್ರತಿಷ್ಠಿತ 74ನೇ ಕಾನ್ ಚಿತ್ರೋತ್ಸವದ ಮಾರುಕಟ್ಟೆ ವಿಭಾಗದಲ್ಲಿ ಪ್ರದರ್ಶನ ಕಂಡ ಕನ್ನಡ ಸಿನೆಮಾ ‘ದೇವರ ಕನಸು

ಪ್ರತಿಷ್ಠಿತ 74ನೇ ಕಾನ್ ಚಿತ್ರೋತ್ಸವದ ಮಾರುಕಟ್ಟೆ ವಿಭಾಗದಲ್ಲಿ ಪ್ರದರ್ಶನ ಕಂಡ ಕನ್ನಡ ಸಿನೆಮಾ  ‘ದೇವರ ಕನಸು
bangalore , ಭಾನುವಾರ, 11 ಜುಲೈ 2021 (15:07 IST)
ಬೆಂಗಳೂರು: ಮಿಲೇನಿಯಮ್ ಪ್ರೊಡಕ್ಷನ್ಸ್ ಬ್ಯಾನರ್ನಲ್ಲಿ ನಿರ್ದೇಶಕ ಸುರೇಶ್ ಲಕ್ಕೂರ್ ನಿರ್ದೇಶನದಲ್ಲಿ ತಯಾರಾದ ಕನ್ನಡ ಚಿತ್ರ ದೇವರ ಕನಸು ಸಿನಿಮಾ ಪ್ರತಿಷ್ಠಿತ 74ನೇ ಕಾನ್ ಸಿನಿಮೋತ್ಸದ ವೇಳೆ ಮಾರುಕಟ್ಟೆ ವಿಭಾಗದ ಮಾರ್ಷ್ ಡು ಫಿಲಂನಲ್ಲಿ  ಪ್ರದರ್ಶನ ಕಂಡಿದೆ.  ಸಾಮಾಜಿಕ ಸಂದೇಶ ಸಾರುವ ಈ ಸಿನಿಮಾದಲ್ಲಿ 12 ವರ್ಷದ ಬಾಲಕನ ಸೈಕಲ್ ಪಡೆದುಕೊಳ್ಳುವ ಕನಸಿನ ಸುತ್ತ ನಿರ್ದೇಶಕರು ಕಥೆ ಹೆಣೆದಿದ್ದಾರೆ. ಸ್ವಂತ ಸೈಕಲ್ ಖರೀದಿಸಿ ಊರ ಸೈಕಲ್ ರೇಸ್ ನಲ್ಲಿ ಗೆಲುವು ಸಾಧಿಸುವುದು ಆತನ ಮುಖ್ಯ ಉದ್ದೇಶ. ಅದನ್ನು ಈಡೇರಿಸಿಕೊಳ್ಳಲು ಬಾಲಕ ಏನೆಲ್ಲ ಹರಸಾಹಸ ಮಾಡುತ್ತಾನೆ ಎಂಬುದೇ ದೇವರ ಕನಸು ಚಿತ್ರದ ಎಳೆಯಾಗಿದೆ.
 
ಈ ಸಿನಿಮೋತ್ಸವದ ಮಾರುಕಟ್ಟೆ ವಿಭಾಗದಲ್ಲಿ ಚಿತ್ರತಂಡ ಪಾಲ್ಗೊಳ್ಳಲು ಅವಕಾಶ ಇತ್ತಾದರೂ, ಕೋವಿಡ್ ಹಿನ್ನೆಲೆಯಲ್ಲಿ ಅದು ಈಡೇರಿರಲಿಲ್ಲ. ಮಾರುಕಟ್ಟೆ ವಿಭಾಗದ ಚಿತ್ರಗಳು ಆನ್ಲೈನ್ ಮೂಲಕ ಪ್ರದರ್ಶನ ಕಾಣುತ್ತಿವೆ. 2019ರಲ್ಲಿ ಶೂಟಿಂಗ್ ಆರಂಭಿಸಿದ್ದ ಈ ಸಿನಿಮಾ, ಒಟ್ಟು 29 ದಿನಗಳಲ್ಲಿ ಸಂಪೂರ್ಣ ಶೂಟಿಂಗ್ ಮುಗಿಸಿಕೊಂಡು, ಅಂತಾರಾಷ್ಟ್ರೀಯ ಸಿನಿಮೋತ್ಸವಗಳಿಗೆ ಪದಾರ್ಪಣೆ ಮಾಡಿದೆ.  
 
ಈ ಸಿನಿಮಾದ ಮತ್ತೊಂದು ವಿಶೇಷ ಏನೆಂದರೆ, ದೇವರ ಕನಸು ಚಿತ್ರಕ್ಕೆ ಪ್ಯಾನ್ ಇಂಡಿಯಾ ತಂತ್ರಜ್ಞರು ಕೆಲಸ ಮಾಡಿದ್ದು, ರತ್ನಜಿತ್ ರಾಯ್ ಛಾಯಾಗ್ರಹಣ, ಅನಿರ್ಬನ್ ಗಂಗೂಲಿ ಸೌಂಡ್ ಡಿಸೈನಿಂಗ್,  ಸಂಕಲನ ಜಿಸ್ನು ಸೇನ್ ಪಶ್ಚಿಮ ಬಂಗಾಳದವರಾಗಿದ್ದಾರೆ. ಅದೇ ರೀತಿ ಚೆನ್ನೈ ಮೂಲದ ನಿತ್ಯಾನಂದ ಸೌಂಡ್, ಸುಂದರ್ ಆರ್ ಅವರ ಸಂಗೀತ ನೀಡಿದ್ದಾರೆ. 
 
ಕೇರಳ ಮೂಲದ ಜಿಷಾ ಮ್ಯಾಥ್ಯು ವಸ್ತ್ರ ವಿನ್ಯಾಸ ಮಾಡಿದ್ದು, ಮತ್ತೋರ್ವ ಮನೋಜ್ ಅಂಗಮಾಲಿ ಮೇಕಪ್ ಜವಾಬ್ದಾರಿ ನಿಭಾಯಿಸಿದ್ದಾರೆ. ಕರ್ನಾಟಕದ ಲಿಂಗರಾಜ್ ಇತಿಹಾಸ್ ಸಂಭಾಷಣೆ ಮತ್ತು ಸಾಹಿತ್ಯ ಬರೆದಿದ್ದು, ಚನ್ನಬಸವ ಪ್ರೊಡಕ್ಷನ್ ಡಿಸೈನರ್ ಆಗಿ ಚಿತ್ರಕ್ಕೆ ಕೆಲಸ ಮಾಡಿದ್ದಾರೆ. ಸಿನಿಮಾಕ್ಕೆ ಸುನೀಲ್ ರಾಮ್ ಕಥೆ ಬರೆದಿದ್ದಾರೆ. 
 
ನಿರ್ದೇಶಕ ಸುರೇಶ್ ಲಕ್ಕೂರ್ ನ್ಯೂಯಾರ್ಕ್ ಸಿನಿಮಾ ಅಕಾಡೆಮಿಯಲ್ಲಿ ತರಬೇತಿ ಪಡೆದಿದ್ದಾರೆ. 
ಮೊದಲ ಚಿತ್ರವಾಗಿ ದೇವರ ಕನಸು ಬತ್ತಳಿಕೆಯಿಂದ ಹೊರಬಂದಿದ್ದು, ಮಕ್ಕಳ ಸಿನಿಮಾ ಮೂಲಕ ಸ್ವತಂತ್ರವಾಗಿ ಕೆಲಸ ಆರಂಭಿಸಿದ್ದಾರೆ. 
 
ಚಿಂತಾಮಣಿಯ ಬಳಿಯ ಹಿರೇಪಳ್ಳಿ. ಕನಂಪಲ್ಲಿ, ಕೈವಾರ ಸುತ್ತಮುತ್ತ ಚಿತ್ರದ ಚಿತ್ರೀಕರಣವಾಗಿದೆ. ಈ ಮೊದಲು ಕನ್ನಡದ ದೃಶ್ಯ ಸಿನಿಮಾದಲ್ಲಿ ಕೆಲಸ ಮಾಡಿದ್ದು, ತಮಿಳು ಮತ್ತು ಮಲಯಾಳಂ ಚಿತ್ರಗಳಲ್ಲಿಯೂ ಗುರುತಿಸಿಕೊಂಡಿದ್ದಾರೆ. 
 
ಈ ಚಿತ್ರದಲ್ಲಿ ಕಲಾವಿದರಾಗಿ ದೀಪಕ್, ಅಮೂಲ್ಯ, ಯುವರಾಜ್ ಕಿಣಿ, ಆರುಷಿ ವೇದಿಕಾ, ಮಣಿ, ರೂಪಾ, ವಿಜಯ್ ರಾಕೇಶ್ ಪಾತ್ರವರ್ಗದಲ್ಲಿದಲ್ಲಿದ್ದರೆ, ಈ ಮಕ್ಕಳ ಚಿತ್ರಕ್ಕೆ ಉದ್ಯಮಿಗಳಾದ ಸಿ. ಜಯಕುಮಾರ್, ಸಿ ಶೇಖರ್ ಬಂಡವಾಳ ಹೂಡಿದ್ದಾರೆ.  ಗಂಗಾಧರ್, ಶಂಕರ್, ಸಿ ಸುಬ್ಬಯ್ಯ ಸಹ ನಿರ್ಮಾಪಕರಾಗಿದ್ದಾರೆ

Share this Story:

Follow Webdunia kannada

ಮುಂದಿನ ಸುದ್ದಿ

ಬಿಗ್ ಬಾಸ್ ಕನ್ನಡ 8: ಈ ವಾರ ಎಲಿಮಿನೇಟ್ ಆಗುತ್ತಿರುವವರು ಇವರೇ