ಬೆಂಗಳೂರು: ಮಂಡ್ಯ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳಿಗೆ ಲೋಕಸಭೆ ಚುನಾವಣೆಯ ಮತದಾನ ಬುಧವಾರ ಆರಂಭವಾಗಿದ್ದು, ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿ ಅಡಗಲಿದೆ. ಮದ್ದೂರು ತಾಲೂಕು ಸೋಮನಹಳ್ಳಿಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಮತ್ತು ಮಾಜಿ ವಿದೇಶಾಂಗ ಸಚಿವ ಎಸ್. ಎಂ. ಕೃಷ್ಣ ಮತದಾನ ಮಾಡಿದರು.
ಮತದಾನ ಮಾಡಿದ ನಂತರ ಹೇಳಿಕೆ ನೀಡಿದ ಎಸ್. ಎಂ.ಕೃಷ್ಣ ಅವರು ಸಿದ್ದರಾಮಯ್ಯನವರನ್ನು ನರೇಂದ್ರ ಮೋದಿಗೆ ಹೋಲಿಸುವುದು ಸರಿಯಲ್ಲ. ಈ ಚುನಾವಣೆ ಮುಂದಿನ ಚುನಾವಣೆಗೆ ದಿಕ್ಸೂಚಿಯಲ್ಲ. ಆದರೂ ಕಾಂಗ್ರೆಸ್ ಈ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ. ಇದು ಎರಡು ಪಕ್ಷಗಳ ನಡುವಿನ ಹಣಾಹಣಿಯೇ ಹೊರತು ಇಬ್ಬರು ವ್ಯಕ್ತಿಗಳ ನಡುವಿನ ಸ್ಪರ್ಧೆ ಎಂದು ಭಾವಿಸಬಾರದು ಎಂದು ಕೃಷ್ಣ ಈ ಸಂದರ್ಭದಲ್ಲಿ ಹೇಳಿದರು.