ಕೇಂದ್ರ ಸಮ್ಮತಿ; ಬಿಐಎ ಇನ್ನು ಕೆಂಪೇಗೌಡ ವಿಮಾನ ನಿಲ್ದಾಣ
ಬೆಂಗಳೂರು , ಶನಿವಾರ, 7 ಏಪ್ರಿಲ್ 2012 (10:35 IST)
ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ಬಿಐಎ) ಇನ್ನು ಮುಂದೆ ನಾಡಪ್ರಭು ಕೆಂಪೇಗೌಡ ಅವರಿಂದ ಹೆಸರಿಸಲ್ಪಡಲಿದೆ. ಇದರಂತೆ ಕೆಂಪೇಗೌಡರ ಹೆಸರನ್ನು ನಾಮಕರಣ ಮಾಡಲು ಕೇಂದ್ರ ಸರಕಾರ ಒಪ್ಪಿಗೆ ಸೂಚಿಸಿವೆ ಎಂದು ಮೂಲಗಳು ತಿಳಿಸಿವೆ. ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರಿಡುವಂತೆ ಕೋರಿ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ನಾಗರಿಕ ವಿಮಾನಯಾನ ಸಚಿವ ಅಜಿತ್ ಸಿಂಗ್ ಅವರಿಗೆ ವಿದೇಶಾಂಗ ಸಚಿವ ಎಸ್. ಎಂ. ಕೃಷ್ಣ ಪತ್ರ ಬರೆದಿದ್ದರು. ಇದಕ್ಕೆ ಸಕರಾತ್ಮಕವಾಗಿ ಸ್ಪಂದಿಸಿರುವ ಅಜಿತ್ ಸಿಂಗ್ ರಾಜ್ಯ ಸರಕಾರದ ಪ್ರಸ್ತಾವನೆಯಂತೆ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರು ನಾಮಕರಣ ಮಾಡಲು ನಿರ್ಧರಿಸಿದ್ದು, ಈ ವಿಷಯವನ್ನು ಕೇಂದ್ರ ಸಚಿವ ಎಸ್. ಎಂ. ಕೃಷ್ಣ ಅವರಿಗೆ ತಿಳಿಸಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ. ಅಲ್ಲದೆ ಮುಂದಿನ ಕೇಂದ್ರ ಸಂಪುಟ ಸಭೆಯಲ್ಲಿ ಇದನ್ನು ಪ್ರಸ್ತಾಪಿಸಿ ಒಪ್ಪಿಗೆ ಪಡೆಯಲಾಗುವುದು ಎಂದು ತಿಳಿದು ಬಂದಿದೆ. ಇದರಂತೆ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ಧಾಣವು ಇನ್ನು ಮುಂದೆ 'ಬೆಂಗಳೂರು ನಾಡಪ್ರಭು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ' ಎಂಬುದಾಗಿ ಹೆಸರಿಸಲ್ಪಡಲಿದೆ.