ಬಿಎಂಐಸಿ ಯೋಜನೆಗೆ ಸಂಬಂಧಿಸಿದಂತೆ ವಿವಾದವನ್ನು ಜೀವಂತವಾಗಿಡಲು ಜೆಡಿಎಸ್ ಯತ್ನಿಸುತ್ತಿರುವುದಾಗಿ ಆರೋಪಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ರೇವಣ್ಣ ಕೆಟ್ಟ ರಾಜಕೀಯ ಮಾಡುತ್ತಿರುವುದಾಗಿ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ನೈಸ್ ಯೋಜನೆಗೆ ಸಂಬಂಧಿಸಿದಂತೆ ಗೌಡರು ಮತ್ತು ಅವರ ಕುಟುಂಬದ ಸದಸ್ಯರು ಅನಾವಶ್ಯಕವಾಗಿ ವಿವಾದ ಸೃಷ್ಟಿಸುತ್ತಿದ್ದಾರೆಂದು ದೂರಿದರು.
ಆ ನಿಟ್ಟಿನಲ್ಲಿ ನೈಸ್ ವಿವಾದ ಕುರಿತಂತೆ ಮಾಜಿ ಮುಖ್ಯಮಂತ್ರಿಗಳು, ಕೇಂದ್ರ ಸಚಿವರಾದ ಎಸ್.ಎಂ.ಕೃಷ್ಣ ಹಾಗೂ ಸಂಸದ ಧರಂಸಿಂಗ್ ಅವರಿಗೆ ವೈಯಕ್ತಿಕವಾಗಿ ಪತ್ರ ಬರೆದು ಸಲಹೆ ಕೇಳುವುದಾಗಿಯೂ ಈ ಸಂದರ್ಭದಲ್ಲಿ ತಿಳಿಸಿದರು.
ಆಡಳಿತಾರೂಢ ಬಿಜೆಪಿ ವಿರುದ್ಧ ರೈತರನ್ನು ಎತ್ತಿಕಟ್ಟುವ ಮೂಲಕ ಗೌಡರು ಅಪಪ್ರಚಾರ ಮಾಡುತ್ತಿದ್ದಾರೆ. ನೈಸ್ ಯೋಜನೆ ಬಗ್ಗೆ ಯಾವುದೇ ಚರ್ಚೆಗೂ ತಾನು ಸಿದ್ದ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು.