ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿರುವ ಶಾಸಕರ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ, ಈ ಶಾಸಕರುಗಳ ಪಕ್ಷಾಂತರದಿಂದ ಯಾರಿಗೂ ಲಾಭವಿಲ್ಲ ಎಂದು ಹೇಳಿದ್ದಾರೆ.
ಕೋಲಾರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇದುವರೆಗೂ ಬಿಜೆಪಿಯಲ್ಲಿ ಅಧಿಕಾರ ಅನುಭವಿಸಿದ್ದ ಈ ಶಾಸಕರುಗಳು ಈಗ ಕಾಂಗ್ರೆಸ್ ಸೇರಲು ಹೊರಟಿದ್ದಾರೆ. ಇವರುಗಳ ಸೇರ್ಪಡೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಲಾಭವಾಗುವುದಿಲ್ಲ ಎಂದು ಅಭಿಪ್ರಾಯಪಟ್ಟರು.
ಕೇಂದ್ರ ಹಣಕಾಸು ಸಚಿವ ಪಿ. ಚಿದಂಬರಂ ಇಂದು ಮಂಡಿಸಿರುವ ಬಜೆಟ್ ಕುರಿತು ಮಾತನಾಡಿದ ಕುಮಾರಸ್ವಾಮಿ, ಈ ಬಜೆಟ್ ನಿರಾಶದಾಯಕವಾಗಿದ್ದು, ದೇಶದ ಅಭಿವೃದ್ದಿಗೆ ಮಾರಕವಾಗಿದೆ ಎಂದು ತಿಳಿಸಿದರು.
ಯಾವುದೇ ಮುಂದಾಲೋಚನೆ ಇಲ್ಲದ ಈ ಬಜೆಟ್ನಿಂದ ಜನತೆ ಹೆಚ್ಚಿನದೇನನ್ನೂ ನಿರೀಕ್ಷಿಸಲಾಗದು ಎಂದು ಕುಮಾರಸ್ವಾಮಿ ತಿಳಿಸಿದರು.