Select Your Language

Notifications

webdunia
webdunia
webdunia
webdunia

ಒಂದು ಕೋಟಿ ಲಂಚ ಪ್ರಕರಣ: ಎಸ್ಐಟಿ ರಚನೆಗೆ ಪಿ.ಪಿ.ಹೆಗ್ಡೆ ಆಕ್ರೋಶ

ಒಂದು ಕೋಟಿ ಲಂಚ ಪ್ರಕರಣ: ಎಸ್ಐಟಿ ರಚನೆಗೆ ಪಿ.ಪಿ.ಹೆಗ್ಡೆ ಆಕ್ರೋಶ
ಬೆಂಗಳೂರು , ಮಂಗಳವಾರ, 30 ಜೂನ್ 2015 (16:53 IST)
ಒಂದು ಕೋಟಿ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿರುವ ಹಿನ್ನೆಲೆಯಲ್ಲಿ ರಾಜ್ಯ ವಕೀಲರ ಪರಿಷತ್ ಅಧ್ಯಕ್ಷ ಪಿ.ಪಿ.ಹೆಗ್ಡೆ ಅವರು ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಮೊದಲು ಎಫ್ಐಆರ್ ದಾಖಲಿಸಿಕೊಂಡು ಬಳಿಕ ತನಿಖೆ ನಡೆಸಲಿ ಎಂದು ಆಗ್ರಹಿಸಿದ್ದಾರೆ.  
 
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಕರಣದ ಎಲ್ಲಾ ಗೊಂದಲಗಳಿಗೆ ರಾಜ್ಯದ ಮುಖ್ಯ ಲೋಕಾಯುಕ್ತ ನ್ಯಾ.ವೈ.ಭಾಸ್ಕರ್ ರಾವ್ ಅವರೇ ಕಾರಣರಾಗಿದ್ದು, ಕೂಡಲೇ ರಾಜೀನಾಮೆ ನೀಡಲಿ ಎಂದ ಅವರು, ಪ್ರಕರಣದ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸದೆ ತನಿಖಾ ತಂಡವನ್ನು ರಚಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಮೊದಲು ಎಫ್ಐಆರ್ ದಾಖಲಿಸಿಕೊಳ್ಳಲಿ. ಆ ಬಳಿಕ ತನಿಖೆ ನಡೆಸಲಿ ಎಂದು ಸರ್ಕಾರವನ್ನು ಒತ್ತಾಯಿಸಿದರು. 
 
ಇನ್ನು ಪ್ರಕರಣದ ತನಿಖೆಯು ಸಿಸಿಬಿ ಹಾಗೂ ಲೋಕಾಯುಕ್ತ ಪೊಲೀಸರ ನಡುವೆ ಕಗ್ಗಂಟಾಗಿ ಪರಿಣಮಿಸಿದ್ದ ಹಿನ್ನೆಲೆಯಲ್ಲಿ ಸರ್ಕಾರವು ಇಂದು ಕಾರಾಗೃಹ ಎಡಿಜಿಪಿ ಕಮಲ್ ಪಂತೇ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿ ತನಿಖೆಗೆ ಆದೇಶಿಸಿದೆ. 
 
ಪ್ರಕರಣದ ಹಿನ್ನೆಲೆ: ಲೋಕಾಯುಕ್ತ ಇಲಾಖೆಯ ಅಧಿಕಾರಿಗಳೇ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದು, 1 ಲಕ್ಷ ಲಂಚ ಪಡೆದಿದ್ದಾರೆ ಎಂಬ ಆರೋಪವಿರುವ ಪ್ರಕರಣವನ್ನು ನ್ಯಾ.ಭಾಸ್ಕರ್ ರಾವ್ ಅವರು ಲೋಕಾಯುಕ್ತರು ತನಿಖೆ ನಡೆಸದಂತೆ ಆದೇಶಿಸಿ ಆ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಿದ್ದರು. ಆದರೆ ಈ ಸಂಬಂಧ ಪ್ರತಿಕ್ರಿಯಿಸಿದ್ದ ರಾಜ್ಯದ ಉಪ ಲೋಕಾಯುಕ್ತ ಸುಭಾಷ್ ಬಿ. ಅಡಿ ಅವರು, ಭ್ರಷ್ಟಾಚಾರದ ಪ್ರಕರಣಗಳನ್ನು ತನಿಖೆ ನಡೆಸುವ ಅಧಿಕಾರ ಸಿಸಿಬಿಗೆ ಇದೆಯೇ ಎಂಬ ಬಗ್ಗೆ ನನಗೆ ತಿಳಿದಿಲ್ಲ. ಆದರೆ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸುತ್ತಿರುವಾಗಿ ಮುಖ್ಯ ಲೋಕಾಯುಕ್ತರು ತಮ್ಮ ಬಳಿ ಸಲಹೆ ಪಡೆದಿಲ್ಲ ಎಂದು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಸರ್ಕಾರವು ವಿಶೇಷ ತನಿಖಾ ತಂಡವನ್ನು ರಚಿಸಿ ತನಿಖೆಯ ಜವಾಬ್ದಾರಿಯನ್ನು ತಂಡಕ್ಕೆ ವಹಿಸಿದೆ. ಆದರೆ ಪ್ರಕರಣದ ಆರೋಪಿಗಳ ವಿರುದ್ಧ ಪ್ರಸ್ತುತವೂ ಎಫ್ಐಆರ್ ದಾಖಲಾಗಿಲ್ಲ. ಈ ಹಿನ್ನೆಲೆಯಲ್ಲಿ ಪಿ.ಪಿ.ಹೆಗ್ಡೆ ಈ ರೀತಿಯಾಗಿ ಪ್ರತಿಕ್ರಿಯಿಸಿದ್ದಾರೆ. 

Share this Story:

Follow Webdunia kannada