Publish Date: Fri, 03 Dec 2021 (11:13 IST)
Updated Date: Fri, 03 Dec 2021 (11:15 IST)
ಶಿವಮೊಗ್ಗ : ಜಿಲ್ಲೆಯಲ್ಲಿ ಕಳೆದ ಮೂರು-ನಾಲ್ಕು ತಿಂಗಳಿನಿಂದ ಕೊರೊನಾ ಸೋಂಕು ಮಂದಗತಿಯಲ್ಲಿತ್ತು.
ಆದರೆ ಇದೀಗ ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನಾ ಸ್ಫೋಟ ಉಂಟಾಗಿದೆ. ಕೇರಳದಿಂದ ಶಿವಮೊಗ್ಗಕ್ಕೆ ಬಂದವರಿಂದಾಗಿ ಮಲೆನಾಡಿನ ಜನರಿಗೆ ಇದೀಗ ಮತ್ತೆ ಆತಂಕ ಎದುರಾಗಿದೆ.
ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ 23 ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದ್ದು, ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಕಾಲೇಜ್ ಹಾಗೂ ಆಸ್ಪತ್ರೆಯನ್ನು ಸೀಲ್ಡೌನ್ ಮಾಡಲಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿರುವ ನರ್ಸಿಂಗ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಲ್ಲಿ ಅನ್ಯರಾಜ್ಯದವರೇ ಹೆಚ್ಚಿದ್ದಾರೆ. ಶಿವಮೊಗ್ಗದ ನಂಜಪ್ಪ ನರ್ಸಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡಲು ಕೇರಳದಿಂದ ನೂರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಆಗಮಿಸಿದ್ದಾರೆ. ಹೀಗೆ ಕೇರಳಕ್ಕೆ ಹೋಗಿ ಬಂದ ವಿದ್ಯಾರ್ಥಿಗಳಲ್ಲಿ ಆರಂಭದಲ್ಲಿ ಶೀತ ಹಾಗೂ ಜ್ವರ ಕಾಣಿಸಿಕೊಂಡಿತ್ತು.
ಕೋವಿಡ್ ಆತಂಕದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಕೋವಿಡ್ ತಪಾಸಣೆಗೆ ಒಳಪಡಿಸಲಾಗಿತ್ತು. ಆಗ ಕೆಲ ವಿದ್ಯಾರ್ಥಿಗಳಲ್ಲಿ ಕೋವಿಡ್ ಇರುವುದು ದೃಢಪಟ್ಟಿತ್ತು. ನಂತರ ಎಚ್ಚೆತ್ತ ಜಿಲ್ಲಾಡಳಿತ ನರ್ಸಿಂಗ್ ಕಾಲೇಜಿನ ಎಲ್ಲ ವಿದ್ಯಾರ್ಥಿಗಳನ್ನು, ಸಿಬ್ಬಂದಿಯನ್ನು ತಪಾಸಣೆಗೆ ಒಳಪಡಿಸಿದಾಗ ಬರೋಬ್ಬರಿ 23 ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ.