Publish Date: Mon, 18 Sep 2017 (11:46 IST)
Updated Date: Mon, 18 Sep 2017 (11:49 IST)
ಕಲಬುರ್ಗಿ: ಮುಂದಿನ ನಾಲ್ಕೈದು ದಿನಗಳಲ್ಲಿ ಕಾಂಗ್ರೆಸ್ ಸಚಿವರು, ಶಾಸಕರು ಮಾಡಿರುವ ಭ್ರಷ್ಟಾಚಾರ ದಾಖಲೆ ಬಿಡುಗಡೆ ಮಾಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೇಳಿದ್ದಾರೆ.
ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೇ ಸೆಪ್ಟೆಂಬರ್ 23ರಂದು ಸಿಎಂ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗುವುದು. ಚುನಾವಣೆ ದೃಷ್ಟಿಯಿಂದ ಸಿಎಂ ಸಿದ್ದರಾಮಯ್ಯ ಹಲವು ಯೋಜನೆ ಘೋಷಣೆ ಮಾಡುವ ಮೂಲಕ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಜನವರಿ ನಂತರ ಘೋಷಿಸಿದ ಯಾವುದೇ ಯೋಜನೆ ಕಾರ್ಯರೂಪಕ್ಕೆ ಬರುವುದಿಲ್ಲ. ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಕಾನೂನು ಸುವ್ಯವಸ್ಥೆ ಹಳ್ಳ ಹಿಡಿದಿದೆ. ಜನರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದರು.
ಪಕ್ಷದ ನಾಯಕರ, ಕಾರ್ಯಕರ್ತರ ಆಸೆಯಂತೆ ಉತ್ತರ ಕರ್ನಾಟಕದಲ್ಲಿ ಚುನಾವಣೆಗೆ ಸ್ಪಧಿಸಲು ನಿರ್ಧರಿಸಿದ್ದೇನೆ. ಕೇಂದ್ರ ನಾಯಕರು ಅನುಮತಿ ನೀಡಿದ್ರೆ ಬಾಗಲಕೋಟೆ ಅಥವಾ ವಿಜಯಪುರ ಜಿಲ್ಲೆಯಿಂದ ಸ್ಪರ್ಧಿಸುವೆ. ಕೇಂದ್ರ ಸರ್ಕಾರದ ಪ್ರಗತಿ ಕಾರ್ಯಗಳು, ರಾಜ್ಯಸರ್ಕಾರದ ವಿಫಲತೆ ಬಗ್ಗೆ ಜನರ ಗಮನಕ್ಕೆ ತರಲು ವಿವಿಧ ಕಾರ್ಯಕ್ರಮ ರೂಪಿಸುವುದಾಗಿ
ಯಡಿಯೂರಪ್ಪ ಹೇಳಿದರು.