Publish Date: Fri, 03 Feb 2023 (18:19 IST)
Updated Date: Fri, 03 Feb 2023 (18:23 IST)
ಬಿಬಿಎಂಪಿ ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಖಾತಾಗೆ ಸಂಬಂಧಿಸಿದ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡುವ ಉದ್ದೇಶದಿಂದ 3 ದಿನಗಳ ಕಾಲ "ಖಾತಾ ಮೇಳ"ವನ್ನು ಆಯೋಜಿಸಲಾಗಿದ್ದು, ಎಲ್ಲರೂ ಅದರ ಸದುಪಯೋಗ ಪಡಿಸಿಕೊಳ್ಳಲು ಹಣಕಾಸು ವಿಭಾಗದ ವಿಶೇಷ ಆಯುಕ್ತರು ಹಾಗೂ ವಲಯ ಆಯುಕ್ತರಾದ ಜಯರಾಮ್ ರಾಯಪುರ ತಿಳಿಸಿದರು. ದಕ್ಷಿಣ ವಲಯ ಬಿಟಿಎಂ ಲೆಔಟ್ 2ನೇ ಹಂತದ ಬಳಿ ಬರುವ ಗ್ರೀನ್ ಸಿಟಿ ಅಪಾರ್ಟ್ಮೆಂಟ್ ನಲ್ಲಿ ಆಯೋಜಿಸಿದ್ದ ಖಾತಾ ಮೇಳಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಪಾಲಿಕೆಯಿಂದ ಆಸ್ತಿ ತೆರಿಗೆ ಹಾಗೂ ಖಾತೆ ಮಾಡಿಕೊಡುವ ವಿಚಾರದಲ್ಲಿ ನಾಗರಿಕರಲ್ಲಿ ಅಸಮಧಾನಗಳಿದ್ದು, ಆ ಬಗ್ಗೆ ದೂರುಗಳು ಕೂಡಾ ಕೇಳಿಬರುತ್ತವೆ. ಈ ನಿಟ್ಟಿನಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿ ನಾಗರಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ ಖಾತಾಗೆ ಸಂಬಂಧಿಸಿದ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡಲು ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಇಂದಿನಿಂದ 3 ದಿನಗಳ ಕಾಲ ಖಾತಾ ಮೇಳ ಹಮ್ಮಿಕೊಳ್ಳಲಾಗಿದೆ ಎಂದರು.