Publish Date: Wed, 09 Apr 2025 (13:55 IST)
Updated Date: Wed, 09 Apr 2025 (13:57 IST)
ಬೆಂಗಳೂರು: ಮುಡಾ ಹಗರಣ ಆರೋಪದ ಬಳಿಕ ಸಿಎಂ ಸಿದ್ದರಾಮಯ್ಯ ಮೇಲೆ ಈಗ ಮತ್ತೊಂದು ಹಗರಣದ ಆರೋಪ ಕೇಳಿಬಂದಿದೆ. ಒಂದಲ್ಲ, ಎರಡಲ್ಲ, ಬರೋಬ್ಬರಿ 500 ಕೋಟಿ ರೂ. ಕಿಕ್ ಬ್ಯಾಕ್ ಪಡೆದುಕೊಂಡ ಆರೋಪ ಬಂದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ವಿಚಾರಣೆ ನಡೆಸಲು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ಕೋರಿ ಸಾಮಾಜಿಕ ಕಾರ್ಯಕರ್ತರೊಬ್ಬರು ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ. ಸಾಮಾಜಿಕ ಕಾರ್ಯಕರ್ತ ರಾಮಮೂರ್ತಿ ಗೌಡ ಎಂಬವರು ದೂರು ನೀಡಿದ್ದಾರೆ.
ಏನಿದು ಪ್ರಕರಣ?
ಸಿಎಂ ಸಿದ್ದರಾಮಯ್ಯ ಈ ಹಿಂದೆ 2015 ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ 8 ಗಣಿ ಗುತ್ತಿಗೆ ನವೀಕರಣ ಮಾಡಿದ್ದರು. ಗಣಿ ಹಗರಣದಲ್ಲಿ ತನಿಖೆ ಎದುರಿಸುತ್ತಿರುವ ಗಣಿ ಕಂಪನಿಗಳ ಗುತ್ತಿಗೆಯನ್ನೂ ನವೀಕರಣ ಮಾಡಲಾಗಿತ್ತು. ಹರಾಜು ಹಾಕುವ ಬದಲು ಈ ಕಂಪನಿಗಳಿಂದ ಸಿಎಂ ಕಿಕ್ ಬ್ಯಾಕ್ ಪಡೆದುಕೊಂಡು ನವೀಕರಣ ಮಾಡಿದ್ದಾರೆ ಎಂಬುದು ಆರೋಪವಾಗಿದೆ. ಸಿದ್ದರಾಮಯ್ಯ ನಿರ್ಧಾರದಿಂದ ರಾಜ್ಯ ಸರ್ಕಾರಕ್ಕೆ 5000 ಕೋಟಿ ರೂ. ನಷ್ಟವಾಗಿತ್ತು ಎಂದು ದೂರಿನಲ್ಲಿ ವಿವರಿಸಲಾಗಿದೆ.
ಇದೀಗ ಭ್ರಷ್ಟಾಚಾರ ನಿಗ್ರಹ ಕಾಯಿದೆಯಡಿ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ. ಇತ್ತೀಚೆಗೆ ಸಿಎಂ ವಿರುದ್ಧ ಮುಡಾ ಹಗರಣದ ಆರೋಪ ಕೇಳಿಬಂದಿತ್ತು. ಪ್ರಕರಣದ ತನಿಖೆ ನಡೆಸಿದ ಲೋಕಾಯುಕ್ತ ಪೊಲೀಸರು ಸಿದ್ದರಾಮಯ್ಯಗೆ ಕ್ಲೀನ್ ಚಿಟ್ ನೀಡಿದ್ದರು. ಆದರೆ ಮುಡಾದಲ್ಲಿನ ಅಕ್ರಮದ ಬಗ್ಗೆ ಇಡಿ ತನಿಖೆ ಮುಂದುವರಿದಿದೆ.