Publish Date: Tue, 07 Sep 2021 (09:39 IST)
Updated Date: Tue, 07 Sep 2021 (09:42 IST)
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ನಿಯೋಗ ಸೋಮವಾರ ಭೇಟಿ ಮಾಡಿದ್ದು, ಈ ವೇಳೆ ರಾಜ್ಯದ ನೀರಾವರಿ ಯೋಜನೆಗಳ ಕುರಿತು ತ್ವರಿತಗತಿಯ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ.
ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಎಚ್.ಕೆ. ಕುಮಾರಸ್ವಾಮಿ ಮತ್ತು ಶಾಸಕರ ಜತೆ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ ಎಚ್.ಡಿ. ಕುಮಾರಸ್ವಾಮಿಯವರು ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದರು.
ಎತ್ತಿನಹೊಳೆ ಯೋಜನೆಯ ಅನುಷ್ಠಾನ, ಮೇಕೆದಾಟು, ಮಹದಾಯಿ, ಕೃಷ್ಣಾ ಮೇಲ್ದಂಡೆ ಸೇರಿದಂತೆ ಹಲವು ನೀರಾವರಿ ಯೋಜನೆಗಳ ಕುರಿತು ತ್ವರಿತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಮೇಕೆದಾಟು ಯೋಜನೆ ಕುರಿತು ಕೇಂದ್ರ ಸರ್ಕಾರದಿಂದ ಯಾವುದೇ ಸ್ಪಷ್ಟ ಮಾಹಿತಿಗಳು ಬರುತ್ತಿಲ್ಲ. ಕೇಂದ್ರ ಸರ್ಕಾರ ಇದೇ ರೀತಿ ಮಲತಾಯಿ ಧೋರಣೆಯನ್ನು ಮುಂದುವರೆಸಿದ್ದೇ ಆದರೆ, ನಾವು ನಿಮ್ಮೊಂದಿಗಿದ್ದೇವೆ. ನಿಮ್ಮ ನಿಯೋಗದ ಜೊತೆಗೆ ನಾವೂ ಕೈಜೋಡಿಸಿ ಕೇಂದ್ರೀಯ ನಾಯಕರನ್ನು ಭೇಟಿ ಮಾಡಲು ಬರುತ್ತೇವೆಂದು ತಿಳಿಸಿದ್ದಾರೆಂದು ವರದಿಗಳು ತಿಳಿಸಿವೆ.
ಇದೇ ವೇಳೆ ಜೆಡಿಎಸ್ ಶಾಸಕರ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡಬೇಕು. ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಸಹಕಾರ ನೀಡಬೇಕು. ಅಭಿವೃದ್ಧಿ ಕಾರ್ಯಕ್ರಮಗಳ ವಿಚಾರದಲ್ಲಿ ತಾರತಮ್ಯ ಮಾಡಬಾರದು ಎಂದೂ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆಂದು ತಿಳಿದುಬಂದಿದೆ.