Publish Date: Sat, 31 Jul 2021 (08:15 IST)
Updated Date: Sat, 31 Jul 2021 (08:17 IST)
ನವದೆಹಲಿ, (ಜು.31): ದೆಹಲಿ ಪ್ರವಾಸದಲ್ಲಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಹಲವು ನಾಯಕರನ್ನ ಭೇಟಿ ಮಾಡಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೆಲ ಜಿಲ್ಲೆಗಳಲ್ಲಿ ಪ್ರವಾಹ ಮತ್ತು ಕೋವಿಡ್-19 ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ ವಾರದೊಳಗೆ ಸಂಪುಟ ವಿಸ್ತರಿಸಲಾಗುವುದು ಎಂದು ಸ್ಪಷ್ಟಪಡಿಸಿದರು.
* ದೆಹಲಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸುದ್ದಿಗೋಷ್ಠಿ
* ಪ್ರಧಾನಿ ಸೇರಿದಂತೆ ಹಲವು ನಾಯಕರ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತು
* ಹಲವು ನಾಯಕರ ಭೇಟಿಯ ಅಂಶಗಳನ್ನ ತಿಳಿಸಿದ ಸಿಎಂ ಬಸವರಾಜ ಬೊಮ್ಮಾಯಿ
ಮೊದಲ ವಾರದೊಳಗೆ ಕೇಂದ್ರ ವರಿಷ್ಠರ ಅನುಮತಿ ಪಡೆಯುತೇವೆ. ಇಂದಿನ ಸಭೆಯಲ್ಲಿ ಸಂಭಾವ್ಯರ ಪಟ್ಟಿಯ ಬಗ್ಗೆ ಚರ್ಚೆ ನಡೆಸಿಲ್ಲ. ಆದರೆ, ಈ ವಿಚಾರದ ಬಗ್ಗೆ ಶೀಘ್ರ ನಿರ್ಧಾರ ಕೈಗೊಳ್ಳುವ ಅಗತ್ಯವಿರುವುದಾಗಿ ತಿಳಿಸಿರುವುದಾಗಿ ಅವರು ಸುದ್ದಿಗಾರರಿಗೆ ಹೇಳಿದರು.
ಕೊವಿಡ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರದಿಂದ ಹೆಚ್ಚು ಒತ್ತು ನೀಡಲಾಗುವುದು. ಚಿಕ್ಕಮಗಳೂರು, ಚಾಮರಾಜನಗರ, ಉಡುಪಿ, ಮೈಸೂರು, ದಕ್ಷಿಣ ಕನ್ನಡ ಜಿಲ್ಲಾಡಳಿತಗಳ ಜತೆ ವಿಡಿಯೋ ಕಾನ್ಫರೆನ್ಸ್ ಮಾಡಲಾಗುವುದು. ಪ್ರವಾಹ ಪರಿಸ್ಥಿತಿ ಕುರಿತು ನಾಳೆ ಅಧಿಕಾರಿಗಳ ಜತೆ ಸಭೆ ನಡೆಸಲಾಗುವುದು ಎಂದು ಈ ವೇಳೆ ಅವರು ತಿಳಿಸಿದ್ದಾರೆ.
(ಜು.31) 11 ಗಂಟೆಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿಯಾಗುತ್ತೇನೆ. ಕರ್ನಾಟಕದ ಯೋಜನೆಗಳ ಕುರಿತು ಸಚಿವರ ಜತೆ ಚರ್ಚೆ ನಡೆಸುತ್ತೇನೆ ಎಂದು ಬೊಮ್ಮಾಯಿ ಹೇಳಿದರು.