Publish Date: Wed, 08 Mar 2023 (08:31 IST)
Updated Date: Tue, 07 Mar 2023 (23:33 IST)
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಡಕ್ಕೆ ಸಿಲುಕಿಸುವ ಕಾಂಗ್ರೆಸ್ ರಣತಂತ್ರಕ್ಕೆ ತಾತ್ಕಾಲಿಕ ಹಿನ್ನಡೆಯಾಗಿದೆ.
ಹಾವೇರಿಯ ಶಿಗ್ಗಾವಿಯಲ್ಲಿ ಬೊಮ್ಮಾಯಿ ವಿರುದ್ಧ ಕಾಂಗ್ರೆಸ್ ಪಂಚಮಸಾಲಿ ಅಸ್ತ್ರ ಬಳಸಲು ಮುಂದಾಗಿತ್ತು. ಆರಂಭದಲ್ಲಿ ಬೊಮ್ಮಾಯಿ ವಿರುದ್ಧ ಸ್ಪರ್ಧಿಸಲು ಸಿದ್ಧ ಎಂದಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ ಈಗ ಹೊಸ ಷರತ್ತು ಹಾಕಿದ್ದಾರೆ ಎನ್ನಲಾಗಿದೆ.
ಸ್ಪರ್ಧೆ ಮಾಡಲು ನಾನು ಸಿದ್ಧನಿದ್ದೇನೆ. ಆದರೆ ಹೆಚ್ಚು ಕಡಿಮೆಯಾದರೆ ಪರ್ಯಾಯ ವ್ಯವಸ್ಥೆಯ ಭರವಸೆ ಏನು ಎಂದು ವಿನಯ್ ಕುಲಕರ್ಣಿ ಕಾಂಗ್ರೆಸ್ಗೆ ಪ್ರಶ್ನೆ ಮಾಡಿದ್ದಾರೆ.
ಅಷ್ಟೇ ಅಲ್ಲದೇ ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಪತ್ನಿ ಟಿಕೆಟ್ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಪತ್ನಿಗೆ ಗ್ಯಾರಂಟಿ ಟಿಕೆಟ್ ನೀಡುವ ಭರವಸೆ ನೀಡಿದರೆ ಮಾತ್ರ ಸ್ಪರ್ಧೆ ಮಾಡುತ್ತೇನೆ ಎಂದು ಪಟ್ಟು ಹಿಡಿದಿದ್ದಾರೆ.