Publish Date: Tue, 18 Apr 2023 (13:45 IST)
Updated Date: Tue, 18 Apr 2023 (12:50 IST)
ಮಡಿಕೇರಿ : ಸ್ವಿಫ್ಟ್ ಕಾರು ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರ ಪೈಕಿ ಮಗು ಸಹಿತ ಆರು ಜನರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯ ಗಡಿ ಗ್ರಾಮವಾದ ಸಂಪಾಜೆಯಲ್ಲಿ ನಡೆದಿದೆ.
ಮಡಿಕೇರಿ ತಾಲೂಕಿನ ಸಂಪಾಜೆ ಪೆಟ್ರೋಲ್ ಬಂಕ್ ಬಳಿ ಈ ದುರ್ಘಟನೆ ನಡೆದಿದೆ. ಸುಳ್ಯದಿಂದ ವಿರಾಜಪೇಟೆಗೆ ತೆರಳುತ್ತಿದ್ದ ಬಸ್ ಹಾಗೂ ಮಡಿಕೇರಿಯಿಂದ ಸುಳ್ಯ ಕಡೆಗೆ ಬರುತ್ತಿದ್ದ KA 01 AH 3898 ಸಂಖ್ಯೆ ಸ್ವಿಫ್ಟ್ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಈ ಮಡಿಕೇರಿ ಕಡೆಯಿಂದ ಬಂದ ಕಾರು ಸಂಪಾಜೆ ಪೆಟ್ರೋಲ್ ಪಂಪ್ ಪೆಟ್ರೋಲ್ ಹಾಕಿ ರಸ್ತೆಗೆ ಇಳಿಯುತ್ತಿದ್ದಂತೆ ಸುಳ್ಯದಿಂದ ಮಡಿಕೇರಿಗೆ ಹೋಗುತ್ತಿದ್ದ ಬಸ್ ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಕಾರಿನಲ್ಲಿದ್ದ ಪ್ರಯಾಣಿಕರ ಪೈಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಗೊಂಡವರನ್ನು ಸುಳ್ಯದಲ್ಲಿರುವ ಕೆವಿಜಿ ಆಸ್ಪತ್ರೆಗೆ ದಾಖಲಿಸಲು ವಾಹನದಲ್ಲಿ ತೆರಳುತ್ತಿದ್ದಾಗ ಮೂವರು ಮೃತಪಟ್ಟಿದ್ದಾರೆ. ಮೂವರು ಮಕ್ಕಳು, ಇಬ್ಬರು ಮಹಿಳೆಯರು, ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ.
ಮಳವಳ್ಳಿ ತಾಲೂಕು ಭೀಮನಹಳ್ಳಿ ಗ್ರಾಮದ ಕುಮಾರ್ ಹಾಗೂ ಕುಬೇರನ ಕೊಪ್ಪಲು ಗ್ರಾಮದ ಶೀಲಾ ಅವರ ಕುಟುಂಬಸ್ಥರು ಧರ್ಮಸ್ಥಳಕ್ಕೆ ಪ್ರಯಾಣಿಸುತ್ತಿರುವ ವೇಳೆ ಈ ಘಟನೆ ನಡೆದಿದೆ.