Publish Date: Tue, 16 Aug 2016 (17:26 IST)
Updated Date: Tue, 16 Aug 2016 (17:31 IST)
ನಗರದ 'ಯುನೈಟೆಡ್ ಥಿಯಾಲಾಜಿಕಲ್ ಕಾಲೇಜಿ'ನಲ್ಲಿ ಸೈನಿಕರ ವಿರುದ್ಧ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು ಘೋಷಣೆ ಕೂಗಿದ್ದು ಸಾಬೀತಾದರೆ ಕಠಿಣ ಕ್ರಮ ನಿಶ್ಚಿತ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನ್ನಾಡುತ್ತಿದ್ದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರೇತರ ಸಂಸ್ಥೆ 'ಆಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ' ಸಂಸ್ಥೆಯ ಸದಸ್ಯರ ವಿರುದ್ಧ ಪ್ರಥಮ ಮಾಹಿತಿ ವರದಿ(ಎಫ್ಐಆರ್) ದಾಖಲಾಗಿದೆ. ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ದೇಶದ್ರೋಹಿ ಘೋಷಣೆ ಕೂಗಿದ್ದು ಸತ್ಯವೆಂದು ಸಾಬೀತಾದರೆ ಅವರನ್ನು ರಕ್ಷಿಸುವುದಿಲ್ಲ. ಆರೋಪ ಸಾಬೀತಾದರೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದ್ದಾರೆ.
ನಗರದ ಮಿಲ್ಲರ್ಸ್ ರಸ್ತೆಯಲ್ಲಿರುವ ಥಿಯೋಲಾಜಿಕಲ್ ಕಾಲೇಜಿನಲ್ಲಿ ಆಗಸ್ಟ್ 13ರಂದು ಆಮ್ನೆಸ್ಟಿ ಇಂಡಿಯಾ ಎಂಬ ಸರ್ಕಾರೇತರ ಸಂಸ್ಥೆ 'ಬ್ರೋಕನ್ ಫ್ಯಾಮಿಲೀಸ್' ಎಂಬ ಕಾರ್ಯಕ್ರಮವನ್ನು ನಡೆಸಿತ್ತು. ಈ ಸಂದರ್ಭದಲ್ಲಿ ಭಾರತೀಯ ಸೇನೆ ವಿರುದ್ಧ ಕೆಲವರು ಘೋಷಣೆ ಕೂಗಿದ್ದರು ಎಂಬ ಆರೋಪ ಕೇಳಿ ಬಂದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಕ್ರಮವನ್ನು ಆಯೋಜಿಸಿದ್ದ ಐವರನ್ನು ಬಂಧಿಸಲಾಗಿದೆ. ಕಾರ್ಯಕ್ರಮದ ಸಿಡಿಯನ್ನು ಸಹ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆಮ್ನೆಸ್ಟಿ ಇಂಡಿಯಾ'ವನ್ನು ನಿಷೇಧಿಸಿ ಮತ್ತು 'ದಿ ಯುನೈಟೆಜ್ ಥಿಯಾಲಜಿಕಲ್' ಕಾಲೇಜ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಎಬಿವಿಪಿ ವ್ಯಾಪಕ ಪ್ರತಿಭಟನೆಯನ್ನು ಮುಂದುವರೆಸಿದ್ದು, ಅವರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಸಹ ಕೈಗೊಂಡಿದ್ದಾರೆ. ಹುಬ್ಬಳ್ಳಿಯಲ್ಲಿ ಸಹ ಎಬಿವಿಪಿ ಪ್ರತಿಭಟನೆಯನ್ನು ಕೈಗೊಂಡಿದೆ.
ಏತನ್ಮಧ್ಯೆ ನಾಳೆ ಅಸಹಕಾರ ಹೋರಾಟ ನಡೆಸುವುದಾಗಿ ಎಬಿವಿಪಿ ಎಚ್ಚರಿಕೆ ನೀಡಿದೆ.
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್ಲೋಡ್ ಮಾಡಿಕೊಳ್ಳಿ .