Publish Date: Sat, 18 Sep 2021 (11:44 IST)
Updated Date: Sat, 18 Sep 2021 (11:48 IST)
ಬೆಂಗಳೂರು, ಸೆ.18 : ಅಕ್ಟೋಬರ್ ತಿಂಗಳಿನಲ್ಲಿ ದಸರಾ ಸೇರಿದಂತೆ ಸಾಲು ಸಾಲು ಸರ್ಕಾರಿ ರಜೆಗಳು ಇರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆಯು ಹೆಚ್ಚಾಗುವ ಸಾಧ್ಯತೆ ಇದ್ದು , ಹೆಚ್ಚುವರಿ ಬಸ್ಗಳನ್ನು ಒದಗಿಸಲು ಕೆಎಸ್ಆರ್ಟಿಸಿ ಸಿದ್ಧತೆ ನಡೆಸಿದೆ.
ಗಾಂಧಿ ಜಯಂತಿ, ಮಹಾಲಯ ಅಮಾವಾಸ್ಯೆ, ದಸರಾ, ಈದ್-ಮಿಲಾದ್, ಮಹರ್ಷಿ ವಾಲ್ಮೀಕಿ ಜಯಂತಿ ಸಾಲು ಸಾಲು ರಜೆಗಳು ಇದ್ದು , ಈ ಅವಧಿಯಲ್ಲಿ ಹೆಚ್ಚುವರಿ ಬಸ್ಗಳನ್ನು ಪ್ರಯಾಣಿಕರಿಗೆ ಒದಗಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಕೆಎಸ್ಆರ್ಟಿಸಿಯ ಮುಖ್ಯ ಯಾಂತ್ರಿಕ ಅಭಿಯಂತರರು ನಿರ್ದೇಶನ ನೀಡಿದ್ದಾರೆ.
ದಸರಾ ಸಂದರ್ಭದಲ್ಲಿ ಘಟಕ ಮತ್ತು ವಿಭಾಗೀಯ ಕಾರ್ಯಾಗಾರಗಳಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲಾ ತಾಂತ್ರಿಕ ಮೇಲ್ವಿಚಾರಕರು ಮತ್ತು ತಾಂತ್ರಿಕ ಸಿಬ್ಬಂದಿಗಳ ವಾರದ ರಜೆಯನ್ನು ರದ್ದುಪಡಿಸಿ ಕರ್ತವ್ಯ ನಿರ್ವಹಿಸುವಂತೆ ಸೂಚಿಸಬೇಕು. ಎಲ್ಲಾ ಬಸ್ಗಳ ಸಮರ್ಪಕ ನಿರ್ವಹಣೆಯನ್ನು ತ್ವರಿತವಾಗಿ ನಿರ್ವಹಿಸಬೇಕು.
ದಸರಾ ಹಬ್ಬ ಸೇರಿದಂತೆ ಅಕ್ಟೋಬರ್ ತಿಂಗಳಿನಲ್ಲಿ ಪ್ರಯಾಣಿಕರಿಗೆ ತೊಂದರೆಯಾಗದಂತೆ ಸಮರ್ಪಕವಾಗಿ ಸುಗಮ ಸಾರಿಗೆ ವ್ಯವಸ್ಥೆಯನ್ನು ಅಗತ್ಯ ಸಿದ್ಧತೆ ಮಾಡಿಕೊಡುವಂತೆ ಸೂಚಿಸಿದ್ದಾರೆ.