Publish Date: Tue, 07 May 2024 (21:19 IST)
Updated Date: Tue, 07 May 2024 (21:22 IST)
ಬೆಂಗಳೂರು: ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರಿಲ್ಯಾಕ್ಸ್ ಮೂಡ್ ನಲ್ಲಿದ್ದಾರೆ.
ಕರ್ನಾಟಕದಲ್ಲಿ ಎರಡನೇ ಹಂತದ ಲೋಕಸಭೆ ಚುನಾವಣೆ ಇಂದಿಗೆ ಮುಗಿದಿದೆ. ಇದರೊಂದಿಗೆ ಕರ್ನಾಟಕದಲ್ಲಿ ಕಳೆದ ಒಂದು ತಿಂಗಳಿನಿಂದ ಅಬ್ಬರದ ಪ್ರಚಾರ ನಡೆಸುತ್ತಿದ್ದ ರಾಜಕೀಯ ನಾಯಕರಿಗೆ ಈಗ ವಿಶ್ರಾಂತಿಯ ಸಮಯ. ಹೀಗಾಗಿ ಡಿಕೆ ಶಿವಕುಮಾರ್ ಈಗಾಗಲೇ ತಮ್ಮ ಕುಟುಂಬ ಸಮೇತ ಚಿಕ್ಕಮಗಳೂರಿನ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ.
ಇತ್ತ ಡಿಕೆ ಶಿವಕುಮಾರ್ ಕುಟುಂಬ ಸಮೇತ ಚಿಕ್ಕಮಗಳೂರಿಗೆ ತೆರಳಿದರೆ ಅತ್ತ ಸಿಎಂ ಸಿದ್ದರಾಮಯ್ಯ ಕುಟುಂಬ ಸಮೇತ ಊಟಿಗೆ ಪ್ರಯಾಣ ಬೆಳೆಸಿದ್ದಾರೆ. ರಾಜ್ಯದಲ್ಲಿ ಪ್ರಜ್ವಲ್ ರೇವಣ್ಣ ಕೇಸ್ ನ ಬಿಸಿ ಬಿಸಿ ಚರ್ಚೆಯಾಗುತ್ತಿದ್ದರೆ ಇತ್ತ ಸಿದ್ದರಾಮಯ್ಯ ಎಲ್ಲದಕ್ಕೂ ಬ್ರೇಕ್ ಹಾಕಿ ಮೂರು ದಿನಗಳ ಕಾಲ ವಿಶ್ರಾಂತಿ ಪಡೆಯಲು ಊಟಿಗೆ ತೆರಳಿದ್ದಾರೆ.
ಡಿಕೆ ಶಿವಕುಮಾರ್ ತಮ್ಮ ಅಳಿಯ ಅಮರ್ತ್ಯ ಒಡೆತನದ ರೆಸಾರ್ಟ್ ನಲ್ಲಿ ತಂಗಿದ್ದಾರೆ. ಅವರಿಗೆ ಸಹೋದರ ಡಿಕೆ ಸುರೇಶ್, ಆಪ್ತ ಶಾಸಕರೂ ಜೊತೆಯಾಗಿದ್ದಾರೆ. ಡಿಕೆ ಶಿವಕುಮಾರ್ ತಂಗಿರುವ ರೆಸಾರ್ಟ್ ಸುತ್ತ ಭದ್ರತೆಗಾಗಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.