Publish Date: Mon, 28 Feb 2022 (15:44 IST)
Updated Date: Mon, 28 Feb 2022 (18:46 IST)
ರಾಜ್ಯ ಸರ್ಕಾರವು ತ್ವರಿತವಾಗಿ ಭೂಸ್ವಾಧೀನ ಮಾಡಿಕೊಟ್ಟರೆ, ಅಗತ್ಯ ಅನುಮತಿ ಮೊದಲಾದವುಗಳಲ್ಲಿ ಸಹಕರಿಸಿದರೆ 2024ರ ವೇಳೆಗೆ ಕರ್ನಾಟಕದಲ್ಲೂ ಅಮೆರಿಕಕ್ಕೆ ಸರಿಸಮನಾಗಿ ಹೆದ್ದಾರಿಗಳನ್ನು ನಿರ್ಮಿಸಿಕೊಡಲಾಗುವುದು' ಎಂದು ಕೇಂದ್ರ ಭೂಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದರು
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ಬೆಳಗಾವಿ ಹಾಗೂ ವಿಜಯಪುರ ಜಿಲ್ಲೆಗಳ ವ್ಯಾಪ್ತಿಯಲ್ಲಿ ₹ 3,972 ಕೋಟಿ ಮೊತ್ತದಲ್ಲಿ ಕೈಗೊಂಡಿರುವ ವಿವಿಧ 5 ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
'ಪ್ರತಿ ಕ್ಷೇತ್ರದ ಅಭಿವೃದ್ಧಿಯೂ ರಸ್ತೆ ಸಂಪರ್ಕವನ್ನು ಅವಲಂಬಿಸಿದೆ. ಆದ್ದರಿಂದ ರಸ್ತೆ ಸಂಪರ್ಕ ಜಾಲ ಸದೃಢಗೊಳಿಸಲು ಸರ್ಕಾರ ಬದ್ಧವಾಗಿದೆ. ಭಾರತಮಾಲಾ-2 ಯೋಜನೆಯಲ್ಲಿ ಈ ಭಾಗದ ಇನ್ನಷ್ಟು ಹೆದ್ದಾರಿ ಯೋಜನೆಗಳನ್ನು ಸೇರಿಸಲಾಗುವುದು' ಎಂದು ಭರವಸೆ ನೀಡಿದರು.
'9ಸಾವಿರ ಕಿ.ಮೀ. ಉದ್ದದ ಗ್ರೀನ್ಫೀಲ್ಡ್ ಹಾಗೂ ಹೆದ್ದಾರಿ ಕಾರಿಡಾರ್ ಯೋಜನೆಯನ್ನು 3 ಲಕ್ಷ ಕೋಟಿ ರೂಪಾಯಿಗೂ ಅಧಿಕ ವೆಚ್ಚದಲ್ಲಿ ಜಾರಿಗೊಳಿಸಲಾಗುತ್ತಿದೆ. ಇದರಲ್ಲಿ ಬೆಂಗಳೂರು-ಚೆನೈ ಯೋಜನೆ ಕೂಡ ಸೇರಿದೆ. ದೆಹಲಿ-ಮುಂಬೈ ಹೆದ್ದಾರಿಯಲ್ಲಿ 120 ಕಿ.ಮೀ.ವೇಗದಲ್ಲಿ ವಾಹನ ಚಲಾಯಿಸಬಹುದು. ಇದರಿಂದ ಎರಡು ನಗರಗಳ ನಡುವಿನ ಪ್ರಯಾಣ ಅವಧಿ 12 ಗಂಟೆಗೆ ಇಳಿಕೆಯಾಗಲಿದೆ' ಎಂದು ತಿಳಿಸಿದರು