Publish Date: Mon, 25 Nov 2024 (17:54 IST)
Updated Date: Mon, 25 Nov 2024 (18:05 IST)
ಬೆಂಗಳೂರು: ನನ್ನ ಮಗ ಚುನಾವಣಾ ಅಖಾಡದಲ್ಲಿ ಸೋತಿದ್ದಾನೆ ಹೊರತು ಮನುಷ್ಯನಾಗಿ ಸೋತಿಲ್ಲ ಎಂದು ಅನಿತಾ ಕುಮಾರಸ್ವಾಮಿ ಅವರು ನಿಖಿಲ್ ಕುಮಾರಸ್ವಾಮಿ ಸೋಲಿನ ಬಗ್ಗೆ ಮೊದಲ ಬಾರಿ ಪ್ರತಿಕ್ರಿಯಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಮೊದಲ ಬಾರಿಗೆ ಅನಿತಾ ಕುಮಾರಸ್ವಾಮಿ ಅವರು ತಮ್ಮ ಮಗನ ಸೋಲಿನ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಟ್ವೀಟ್ ಏನು?
ನನ್ನ ಪುತ್ರ ನಿಖಿಲ್ ಕುಮಾರಸ್ವಾಮಿ, ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಪರಾಜಯ ಹೊಂದಿದ್ದಾನೆ, ಒಪ್ಪುತ್ತೇನೆ. ಚುನಾವಣೆ ವ್ಯವಸ್ಥೆಯಲ್ಲಿ ಸೋಲು ಗೆಲುವು ಇದ್ದೇ ಇರುತ್ತದೆ ಹಾಗೂ ಒಬ್ಬರು ಗೆಲ್ಲಬೇಕಾದರೆ ಇನ್ನೊಬ್ಬರು ಸೋಲಲೇಬೇಕಾಗುತ್ತದೆ. ಆದರೆ ಸೋಲಿಗೆ ಅನೇಕ ಕಾರಣಗಳಿರುತ್ತವೆ. ಹಾಗೆಂದು ನಿಖಿಲ್ ಸೋಲಿನ ಕಾರಣಗಳ ಬಗ್ಗೆ ಚರ್ಚಿಸುವುದು ನನ್ನ ಉದ್ದೇಶವಲ್ಲ.
ರಾಜಕಾರಣದಲ್ಲಿ ನನಗಾಗಲಿ, ನನ್ನ ಪತಿಗಾಗಲಿ ಅಥವಾ ನನ್ನ ಪೂಜ್ಯ ಮಾವನವರಿಗೇ ಆಗಲಿ ಗೆಲುವು, ಸೋಲು ಹೊಸದೇನಲ್ಲ. ಎರಡನ್ನೂ ಸಮಚಿತ್ತದಿಂದ ಸ್ವೀಕರಿಸಿದ್ದೇವೆ. ಗೆದ್ದಾಗ ಬೀಗಿಲ್ಲ, ಸೋತಾಗ ಕುಗ್ಗಿಲ್ಲ. ಸೋತ ಹತಾಶೆಯಲ್ಲಿ ಅನ್ಯರನ್ನು ಹೀಗಳೆದಿಲ್ಲ. ನನ್ನ ಮಗನಿಗೂ ಇದೇ ಅನ್ವಯ ಆಗುತ್ತದೆ.
ನನ್ನ ಮಗನ ಬಗ್ಗೆ ರಾಜ್ಯದ ಜನತೆಗೆ ಹೆಚ್ಚೇನೂ ಹೇಳುವ ಅಗತ್ಯವಿಲ್ಲ. ಅವನು ಒಳ್ಳೆಯ ಮಗ, ಒಳ್ಳೆಯ ಪತಿ, ಒಳ್ಳೆಯ ತಂದೆ. ರಾಜಕಾರಣಕ್ಕೆ ಬರುವ ಮುನ್ನ ಒಳ್ಳೆಯ ನಾಯಕ ನಟ. ಅವನಂಥ ಒಳ್ಳೆಯ ಮಗನನ್ನು ಪಡೆದಿದ್ದಕ್ಕಾಗಿ ನಾನೂ ನನ್ನ ಪತಿ ಹೆಮ್ಮೆಪಡುತ್ತೇವೆ.
ತಾಯಿಯಾಗಿ ಅವನ ಯಶಸ್ಸನ್ನು ಸಂಭ್ರಮಿಸುತ್ತೇನೆ. ಅವನಿಗೆ ಕಷ್ಟ ಎದುರಾದಾಗ ಕಣ್ಣೀರಿಟ್ಟಿದ್ದೇನೆ. ನನ್ನ ಕರುಳಬಳ್ಳಿಯ ಮೇಲೆ ನನಗಷ್ಟು ಮಮಕಾರ ಇರುತ್ತದಲ್ಲವೇ? ನನ್ನಂತಹ ಎಲ್ಲಾ ತಾಯಂದಿರಿಗೂ ನನ್ನ ಭಾವನೆಗಳು ಅರ್ಥವಾಗುತ್ತವೆ ಎನ್ನುವ ವಿಶ್ವಾಸ ನನ್ನದು.
ನನ್ನ ಮಗ 3ನೇ ಸಲ ಸೋತಿದ್ದಾನೆ. ಅವನು ಚುನಾವಣೆಯಲ್ಲಿ ಮಾತ್ರ ಸೋತಿದ್ದಾನೆಯೇ ಹೊರತು ಮನುಷ್ಯನಾಗಿ ಸೋತಿಲ್ಲ, ಅವನ ಮಾನವೀಯತೆ, ಸಹೃದಯತೆ ಸೋತಿಲ್ಲ. ಅವನ ಮನಸ್ಸು, ಹೃದಯ ವೈಶಾಲ್ಯತೆ ಏನೆಂದು ತಾಯಿಯಾಗಿ ನನಗೆ ಚನ್ನಾಗಿ ಗೊತ್ತು.