Publish Date: Thu, 13 Apr 2023 (20:50 IST)
Updated Date: Thu, 13 Apr 2023 (20:20 IST)
ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಬಳಿಕ ಶುರುವಾಗಿರುವ ಬಂಡಾಯ, ರಾಜೀನಾಮೆ ಪರ್ವ ನಿಂತಿಲ್ಲ. ಇದರಲ್ಲಿ ಚಾಮರಾಜಪೇಟೆ ಕ್ಷೇತ್ರವೂ ಸೇರಿದೆ. ಚಾಮರಾಜಪೇಟೆಯಲ್ಲಿ ಬಿಜೆಪಿ ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ಗೆ ಟಿಕೆಟ್ ನೀಡಿದೆ.ಇದು ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಸೈಲೆಂಟ್ ಸುನೀಲನ ಕೆರಳಿಸಿದೆ. ಇದರ ಬೆನ್ನಲ್ಲೇ ಬೆಂಬಲಿಗರು ಬಿಜೆಪಿ ಕಚೇರಿಗೆ ನುಗ್ಗಿ ಗಲಾಟೆ ಮಾಡಿದ್ದರು. ಚಾಮಾರಾಜಪೇಟೆಯಲ್ಲಿ ಭಾಸ್ಕರ್ ರಾವ್ ಬೇಡ ಅನ್ನೋ ಕೂಗು ಹೆಚ್ಚಾಗುತ್ತಿದೆ. ಇದರ ಬೆನ್ನಲ್ಲೇ ಬಂಡಾಯ ಶಮನಕ್ಕೆ ಕರ್ನಾಟಕ ಚುನಾವಣಾ ಉಸ್ತುವಾರಿ ಅಣ್ಣಾಮಲೈ ಎಂಟ್ರಿಕೊಟ್ಟಿದ್ದಾರೆ. ಇಷ್ಟೇ ಅಲ್ಲ ಸೈಲೆಂಟ್ ಸುನೀಲನ ಬೆಂಬಲಿಗರು ಮಹತ್ವದ ಸಲಹೆ ನೀಡಿದ್ದಾರೆ. ಚಾಮರಾಜಪೇಟೆಯಲ್ಲಿ ಅಳೆದು ತೂಗಿ ಬಿಜೆಪಿ ಭಾಸ್ಕರ್ ರಾವ್ಗೆ ಟಿಕೆಟ್ ನೀಡಿದೆ. ಭಾಸ್ಕರ್ ರಾವ್ ಹಿಂದೆ ಬೆಂಗಳೂರು ಕಮಿಷನರ್ ಆಗಿ ಕೆಲಸ ಮಾಡಿದ್ದಾರೆ. ಜನರ ಸೇವೆ ಮಾಡಲು ಬಂದವರನ್ನು ಎಲ್ಲರು ಒಪ್ಪಿಕೊಳ್ಳಬೇಕು. ವ್ಯಕ್ತಿಯ ಬಗ್ಗೆ ನಾನು ಕಮೆಂಟ್ ಮಾಡುವುದಿಲ್ಲ. ಅಭ್ಯರ್ಥಿ ಬದಲಾವಣೆಗಾಗಿ ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಮಾಡಲು ಎಲ್ಲರಿಗೂ ಅವಕಾಶವಿದೆ. ಆದರೆ ಈ ಪ್ರತಿಭಟನೆ ಗೌರವಯುತವಾಗಿರುಬೇಕು. ಕಚೇರಿ ಮುಂದೆ ಪ್ರತಿಭಟನೆ ಮಾಡಿದ್ದು ತಪ್ಪು ಎಂದರ್ಥವಲ್ಲ. ಒಬ್ಬರಿಗೆ ಟಿಕೆಟ್ ಕೊಟ್ಟಾಗ ಎಲ್ಲರೂ ಒಪ್ಪಿಕೊಂಡು ಅವರ ಪರ ಕೆಲಸ ಮಾಡಬೇಕು ಎಂದು ಅಣ್ಣಾಮಲೈ ಹೇಳಿದ್ದಾರೆ. ಈ ಮೂಲಕ ಪರೋಕ್ಷವಾಗಿ ಚಾಮರಾಜಪೇಟೆಯಲ್ಲಿ ಅಭ್ಯರ್ಥಿ ಬದಲಾವಣೆ ಇಲ್ಲ ಎಂದು ಸೈಲೆಂಟ್ ಸುನೀಲನ ಬೆಂಬಲಿಗರಿಗೆ ಹೇಳಿದ್ದಾರೆ.