ಬೆಳಗಾವಿ: ಹುಬ್ಬಳ್ಳಿಯಲ್ಲಿ ಭಾನುವಾರ ಅತ್ಯಾಚಾರ ಯತ್ನ, ಕೊಲೆ ಆರೋಪಿಯನ್ನು ಗುಂಡಿಕ್ಕಿ ಕೊಂದ ಪಿಎಸ್ಐ ಅನ್ನಪೂರ್ಣ ಅವರಿಗೆ ಅತ್ಯುನ್ನತ ಪದಕ ನೀಡಬೇಕೆಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಗೃಹ ಸಚಿವ ಜಿ ಪರಮೇಶ್ವರ್ ಅವರಿಗೆ ಶಿಫಾರಸು ಮಾಡುತ್ತೇನೆಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಹಿಂದಿನಿಂದಲೂ ಪ್ರತಿಪಾದಿಸುತ್ತ ಬಂದಿದ್ದೇನೆ. ಇಂಥ ಪ್ರಕರಣಗಳಲ್ಲಿ ಆರೋಪಿಗಳಿಗೆ ಗಲ್ಲುಶಿಕ್ಷೆ ಆಗಬೇಕು. ದೌರ್ಜನ್ಯಕ್ಕೆ ಒಳಗಾದವರಿಗೆ ತ್ವರಿತವಾಗಿ ನ್ಯಾಯ ಸಿಗಬೇಕು ಎಂದು ಪಿಎಸ್ಐ ನಡೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಹುಬ್ಬಳ್ಳಿ ಪ್ರಕರಣದಲ್ಲಿ ತೆಗೆದುಕೊಂಡ ಕ್ರಮಕ್ಕಾಗಿ ಅನ್ನಪೂರ್ಣ ಅವರನ್ನು ಅಭಿನಂದಿಸುತ್ತೇನೆ. ಅವರ ನಡೆ ಬೇರೆ ಅಧಿಕಾರಿಗಳಿಗೆ ದಾರಿದೀಪವಾಗಬೇಕು. ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯದಂಥ ಪಿಡುಗು ಸಮಾಜದಿಂದ ನಿರ್ಮೂಲನೆಯಾಗಬೇಕು ಎಂದರು.
ನಮ್ಮ ಇಲಾಖೆಯಿಂದ ಸರ್ಕಾರಿ ನೌಕರರಿಗೆ ರಾಣಿ ಚನ್ನಮ್ಮ ಪ್ರಶಸ್ತಿ ನೀಡುವುದಿಲ್ಲ. ಒಂದುವೇಳೆ ಸರ್ಕಾರಿ ನೌಕರರಿಗೂ ಪ್ರಶಸ್ತಿ ನೀಡಿದರೆ, ಅನ್ನಪೂರ್ಣ ಮೊದಲಿಗರಾಗಿರುತ್ತಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.