Publish Date: Wed, 25 Mar 2020 (15:22 IST)
Updated Date: Wed, 25 Mar 2020 (15:24 IST)
ಕೊರೊನಾ ವೈರಸ್ ನಿಂದಾಗಿ ಮಹಿಳೆಯೊಬ್ಬರು ಸಾವನ್ನಪ್ಪಿರೋ ಶಂಕೆ ವ್ಯಕ್ತವಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಗೌರಿಬಿದನೂರಿನಲ್ಲಿ ಹೋಮ್ ಕ್ವಾರಂಟೈನ್ ನಲ್ಲಿದ್ದ 70 ವರ್ಷ ಪ್ರಾಯದ ವೃದ್ಧೆಯೊಬ್ಬರು ಬೆಂಗಳೂರಿನ ಬೌರಿಂಗ್ ಆಸ್ಪತ್ರೆ ಆಸ್ಪತ್ರೆಯಲ್ಲಿ ಮೃತಪಟ್ಟದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಈಗಾಗಲೇ ಒಂದೇ ಕುಟುಂಬದ ಮೂವರಲ್ಲಿ ಕೋವಿಡ್ 19 ಸೋಂಕು ದೃಢಪಟ್ಟಿದೆ. ಈ ನಡುವೆ ಹೋಮ್ ಕ್ವಾರೆಂಟೈನ್ ನಲ್ಲಿದ್ದ ಮಹಿಳೆ ಸಾವನ್ನಪ್ಪಿರುವುದು ಆತಂಕಕ್ಕೆ ಕಾರಣವಾಗಿದೆ.
ಚಿಕ್ಕಬಳ್ಳಾಪುರದಲ್ಲಿ ಮೂರು ಕೋವಿಡ್ 19 ಸೋಂಕು ಪತ್ತೆಯಾಗಿದ್ದ ಆ ಕುಟುಂಬಕ್ಕೆ ಸಂಬಂಧಿಸಿದವರು ಇವರಾಗಿದ್ದರು ಎಂಬ ಮಾಹಿತಿ ಇದೀಗ ಲಭಿಸಿದೆ. ಈ ವೃದ್ಧೆ ಮೆಕ್ಕಾ ಪ್ರವಾಸದಿಂದ ಹಿಂದಿರುಗಿದ್ದರು. ಆ ಬಳಿಕ ಅವರು ಹೋಮ್ ಕ್ವಾರಂಟೈನ್ ನಲ್ಲಿದ್ದರು.
ಈ ಮಹಿಳೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ರಾಜೀವ್ ಗಾಂಧಿ ಎದೆ ರೋಗಗಳ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಅಲ್ಲಿಂದ ಅವರನ್ನು ಬೌರಿಂಗ್ ಆಸ್ಪತ್ರೆಗೆ ವರ್ಗಾಯಿಸಲಾಗಿತ್ತು. ಬೌರಿಂಗ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಅವರು ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿದ್ದಾರೆ.
ಈ ಮಹಿಳೆ ಮಧುಮೇಹ, ಎದೆನೋವು, ಹಾಗೂ ಪೃಷ್ಠಭಾಗದ ಮುರಿತದಿಂದ ಬಳಲುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಆದರೆ ಮಹಿಳೆಯ ಸಾವಿಗೆ ಕೋವಿಡ್ 19 ಸೋಂಕು ಕಾರಣವೇ ಎಂಬುದು ಪರೀಕ್ಷಾ ವರದಿಗಳ ಬಳಿಕವೇ ಖಚಿತವಾಗಬೇಕಿದೆ ಎಂಬ ಮಾಹಿತಿಯನ್ನೂ ಸಹ ಸಚಿವರು ಇದೇ ಸಂದರ್ಭದಲ್ಲಿ ನೀಡಿದ್ದಾರೆ.