Publish Date: Fri, 19 Apr 2024 (14:14 IST)
Updated Date: Fri, 19 Apr 2024 (14:36 IST)
ಬೆಂಗಳೂರು: ಕಲ್ಯಾಣ ಕರ್ನಾಟಕದ ಪ್ರಭಾವಿ ನಾಯಕ, ಮಾಜಿ ಸಚಿವ ಮಾಲಿಕಯ್ಯ ಗುತ್ತೇದಾರ್ ಅವರು ಶುಕ್ರವಾರ ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ಕೈಹಿಡಿದರು.
ಪಕ್ಷ ಸೇರ್ಪಡೆ ಬಳಿಕ ಮಾತನಾಡಿದ ಮಾಲಿಕಯ್ಯ ಗುತ್ತೇದಾರ, ಬಿಜೆಪಿ ನಾಯಕರು ನನ್ನನ್ನು ನಡೆಸಿಕೊಂಡ ಬಗ್ಗೆ ಬಹಳ ನೋವಿದೆ. ಹಿಂದುಳಿದ ವರ್ಗದವನನ್ನು ಆ ಪಕ್ಷದವರು ಹೇಗೆ ನಡೆಸಿಕೊಳ್ಳುತ್ತಾರೆಂಬ ಅನುಭವ ಆಗಿದೆ ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಮಾಲೀಕಯ್ಯ ಗುತ್ತೇದಾರ್ ಚಿರಪರಿಚಿತರು ಹಾಗೂ ಆತ್ಮೀಯರು. ಮಾಲೀಕಯ್ಯ ಗುತ್ತೇದಾರ್ ತರಹದವರಿಗೆ ಬಿಜೆಪಿಯಲ್ಲಿ ಇರುವುದಕ್ಕೆ ಸಾಧ್ಯ ಆಗುವುದಿಲ್ಲ. ಇವರು ಸಾಮಾಜಿಕ ನ್ಯಾಯದ ಪರವಾಗಿ ಇದ್ದವರು. ಮಾಲೀಕಯ್ಯ ನಮ್ಮ ಪಕ್ಷಕ್ಕೆ ಬಂದಿದ್ದರಿಂದ ಕಲಬುರಗಿ ಸೇರಿದಂತೆ ರಾಜ್ಯದಲ್ಲಿ ರಾಜಕೀಯವಾಗಿ ಪರಿಣಾಮ ಉಂಟಾಗುತ್ತದೆ ಎಂದರು.
ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಮಾತನಾಡಿ, ರಾಜ್ಯದ ಉದ್ದಗಲಕ್ಕೂ ಬಿಜೆಪಿ, ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಬಿಜೆಪಿಯವರಿಗೆ ಧ್ವನಿ ಇಲ್ಲ, ಧ್ವನಿ ಕಳೆದುಕೊಂಡಿದ್ದಾರೆ. ಷರತ್ತು ಇಲ್ಲದೆ ಪಕ್ಷಕ್ಕೆ ಬರುವವರಿಗೆ ನಮ್ಮ ಸ್ವಾಗತ. ನನ್ನದು ಮತ್ತು ಮಾಲೀಕಯ್ಯ ಗುತ್ತೇದಾರ್ ಸಂಬಂಧ 35 ವರ್ಷ ಹಳೆಯದ್ದು. ಮಾಲೀಕಯ್ಯ ಗುತ್ತೇದಾರ್ ಅವರು ಮಂತ್ರಿಯಾಗಿ ಕೆಲಸ ಮಾಡಿದ್ದಾರೆ. ಯಾವುದೇ ಷರತ್ತು ಇಲ್ಲದೆಯೇ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದರು.
ದೇಶದಲ್ಲಿ ಬಿಜೆಪಿ 200 ಸ್ಥಾನಗಳನ್ನೂ ದಾಟುವುದಿಲ್ಲ ಎಂಬ ಮಾಹಿತಿ ಇದೆ. ದಕ್ಷಿಣ ಭಾರತದ ಎಲ್ಲ ಕಡೆ ಕಾಂಗ್ರೆಸ್ ಹೆಚ್ಚು ಸ್ಥಾನ ಗೆಲ್ಲಲಿದೆ. ಇಡೀ ದಕ್ಷಿಣ ಭಾರತದಲ್ಲಿ ಬಿಜೆಪಿ ಸಿಂಗಲ್ ಡಿಜಿಟ್ಗೆ ಉಳಿದುಕೊಳ್ಳುತ್ತಾರೆ. ಕರ್ನಾಟಕ ತೆಲಂಗಾಣ ಸೇರಿ ಎಲ್ಲ ಕಡೆಯೂ ಬಿಜೆಪಿ ಸಿಂಗಲ್ ಡಿಜಿಟ್ಗೆ ಉಳಿಯಲಿದೆ. ಇದು ನಮ್ಮ ಪಕ್ಷಕ್ಕೆ ಸಿಕ್ಕಿರುವ ಮಾಹಿತಿ ಎಂದು ತಿಳಿಸಿದರು.