Publish Date: Tue, 18 Jan 2022 (20:22 IST)
Updated Date: Tue, 18 Jan 2022 (20:32 IST)
ಬೆಂಗಳೂರು:- ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ವಿವಿಧ ಇಲಾಖೆಗಳ ಸೇವೆಗಳನ್ನು ಒದಗಿಸುವ ರಾಜ್ಯ ಸರಕಾರದ ಮಹತ್ವಕಾಂಕ್ಷಿ ಗ್ರಾಮ ಒನ್ ಯೋಜನೆ ರಾಜ್ಯದ 12 ಜಿಲ್ಲೆಗಳಲ್ಲಿ ಗಣರಾಜ್ಯೋತ್ಸವದಂದು ಜಾರಿಗೆ ಬರಲಿದೆ.
ಈ ಯೋಜನೆ ಜಾರಿಗೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ವರ್ಚುವಲ್ ಮೂಲಕ ಸಭೆ ನಡೆಯಿತು.
ಈ ಯೋಜನೆ ರಾಜ್ಯದ 12 ಜಿಲ್ಲೆಗಳಲ್ಲಿ ಜಾರಿಯಾಗಲಿದೆ. ಒಟ್ಟು 3000 ಗ್ರಾಮ ಒನ್ ಸೇವಾ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ವರ್ಚುವಲ್ ಸಭೆಯಲ್ಲಿ ಮಾತನಾಡಿದ ಬಸವರಾಜ ಬೊಮ್ಮಾಯಿ, ಸದ್ಯಕ್ಕೆ 12 ಜಿಲ್ಲೆಗಳಲ್ಲಿ ಯೋಜನೆ ಜಾರಿಯಾಗುತ್ತಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಯೋಜನೆ ಜಾರಿಯಾಗಬೇಕು. ಹಲವಾರು ಪ್ರಮುಖ ಇಲಾಖೆಗಳ ಎಲ್ಲಾ ಸೇವೆಗಳು ಗ್ರಾಮೀಣ ಪ್ರದೇಶದ ಜನರಿಗೆ ಸುಲಭವಾಗಿ ಸಿಗುವಂತಾಗಬೇಕು ಎಂದು ಸೂಚನೆ ನೀಡಿದರು.
ಬೀದರ್, ಕೊಪ್ಪಳ, ಬಳ್ಳಾರಿ, ಬೆಳಗಾವಿ, ಹಾವೇರಿ, ವಿಜಯಪುರ, ದಾವಣಗೆರೆ, ಶಿವಮೊಗ್ಗ, ತುಮಕೂರು, ಚಿಕ್ಕಮಂಗಳೂರು, ಉಡುಪಿ, ಕೊಡಗು ಜಿಲ್ಲೆಗಳಲ್ಲಿ ಈ ಮಹತ್ವಾಕಾಂಕ್ಷಿ ಯೋಜನೆ ಜಾರಿಯಾಗಲಿದೆ.
ಕಂದಾಯ, ಆಹಾರ, ಆರೋಗ್ಯ ಕಾರ್ಮಿಕ ಸೇರಿದಂತೆ ವಿವಿಧ ಇಲಾಖೆಗಳ ಅಂದಾಜು 100 ಸೇವೆಗಳು ಗ್ರಾಮ ಒನ್ ಕೇಂದ್ರದಲ್ಲಿ ಲಭ್ಯವಾಗಲಿವೆ. ಗ್ರಾಮ ಒನ್ ಕೇಂದ್ರಗಳಿಗೆ ನಿರಂತರ ವಿದ್ಯುತ್ ಸಂಪರ್ಕ ಹಾಗೂ ಅಂತರ್ಜಾಲ- ಇಂಟರ್ನೆಟ್ ಸಂಪರ್ಕ ಕಲ್ಪಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಈ ಆಡಳಿತ) ಅಪರ ಮುಖ್ಯ ಕಾರ್ಯದರ್ಶಿ ರಾಜೀವ್ ಚಾವ್ಲಾ ಭಾಗವಹಿಸಿದ್ದರು.