Publish Date: Thu, 29 Feb 2024 (14:53 IST)
Updated Date: Thu, 29 Feb 2024 (14:59 IST)
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಬಂಡಾಯ ಅಭ್ಯರ್ಥಿಯಾಗಿ ಅರುಣ್ ಕುಮಾರ್ ಪುತ್ತಿಲ ಸ್ಪರ್ಧೆ ನಡೆಸಲು ತೀರ್ಮಾನಿಸಿದ್ದು, ಬಿಜೆಪಿಗೆ ಮತ್ತೆ ತಲೆನೋವು ಶುರುವಾಗಿದೆ.
ಕಳೆದ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಅರುಣ್ ಕುಮಾರ್ ಬಿಜೆಪಿಯಿಂದ ಟಿಕೆಟ್ ಗೆ ಬೇಡಿಕೆಯಿಟ್ಟಿದ್ದರು. ಆದರೆ ಅವರಿಗೆ ಬಿಜೆಪಿ ಟಿಕೆಟ್ ಸಿಗಲಿಲ್ಲ. ಹೀಗಾಗಿ ಅರುಣ್ ಕುಮಾರ್ ಪುತ್ತಿಲ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದರು. ಪರಿಣಾಮ ಚುನಾವಣೆಯಲ್ಲಿ ಬಿಜೆಪಿ ಮತಗಳು ವಿಂಗಡನೆಯಾದವು. ಪರಿಣಾಮ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸುವಂತಾಯಿತು. ಸ್ಥಳೀಯ ನಾಯಕರ ಪ್ರತಿಷ್ಠೆಯಿಂದ ಇಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಸೋಲಾಯಿತು ಎಂದು ಕಾರ್ಯಕರ್ತರೇ ಅಸಮಾಧಾನ ಹೊರಹಾಕಿದ್ದರು.
ಇದೀಗ ಲೋಕಸಭೆ ಚುನಾವಣೆಯಲ್ಲಿ ಸಂದದರ್ಭದಲ್ಲಿ ಪುತ್ತಿಲರನ್ನು ಬಿಜೆಪಿಗೆ ಕರೆತರಲು ಪ್ರಯತ್ನ ನಡೆಸಲಾಗಿತ್ತು. ಆದರೆ ಕೊನೆಯ ಕ್ಷಣದ ಕಸರತ್ತಿನ ಹೊರತಾಗಿಯೂ ಇಬ್ಬರ ನಡುವೆ ಒಮ್ಮತ ಮೂಡದೇ ವಿಫಲವಾಗಿದೆ. ಹೀಗಾಗಿ ಈಗ ಪುತ್ತಿಲ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ.
ಸದ್ಯಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಳಿನ್ ಕುಮಾರ್ ಕಟೀಲ್ ಸ್ಪರ್ಧೆಗೆ ಬಿಜೆಪಿ ಬೆಂಬಲಿಗರಲ್ಲೇ ಒಮ್ಮತವಿಲ್ಲ. ಅವರ ವಿರುದ್ಧ ಅಸಾಮಾಧಾನಗಳಿವೆ. ಈ ಹಿನ್ನಲೆಯಲ್ಲಿ ಮತ್ತೆ ಬಿಜೆಪಿ ಪ್ರಲಬ ಕೋಟೆಯಾಗಿರುವ ದಕ್ಷಿಣ ಕನ್ನಡದಲ್ಲಿ ಮತ ವಿಭಜೆಯಾಗುವ ಎಲ್ಲಾ ಲಕ್ಷಣಗಳಿವೆ. ಕರ್ನಾಟಕದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿಗೆ ಪ್ರಬಲ ಕೋಟೆ. ಆದರೆ ಈಗ ಇಲ್ಲಿ ಬಂಡಾಯ ಎದ್ದಿರುವುದು ಬಿಜೆಪಿ ಹೈಕಮಾಂಡ್ ಗೆ ಹೊಸ ತಲೆನೋವಾಗಲಿದೆ.