Publish Date: Fri, 26 Jun 2020 (20:26 IST)
Updated Date: Fri, 26 Jun 2020 (20:29 IST)
ಕೋವಿಡ್-19 ಸೋಂಕು ನಿಯಂತ್ರಣಲ್ಲಿದ್ದರೆ, ಇದಕ್ಕೆ ಆಶಾ ಕಾರ್ಯಕರ್ತೆಯರೇ ಕಾರಣ ಎಂದು ಸಚಿವರೊಬ್ಬರು ಹೇಳಿದ್ದಾರೆ.
ಆಶಾ ಕಾರ್ಯಕರ್ತೆಯರು ಸರ್ಕಾರದ ಜೊತೆ ಕೈಜೋಡಿಸುವ ಮೂಲಕ ಕೋವಿಡ್-19 ಹತೋಟಿಗೆ ಶ್ರಮಿಸುತ್ತಿದ್ದಾರೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ಆಶಾ ಕಾರ್ಯಕರ್ತರ ಬಗ್ಗೆ ಗುಣಗಾನ ಮಾಡಿದ್ದಾರೆ.
ಕಲಬುರಗಿ ನಗರದ ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಸಹಕಾರ ಇಲಾಖೆ, ಸಹಕಾರ ಸಂಘಗಳು ಹಾಗೂ ಸಂಘ, ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಕಲಬುರಗಿ ಜಿಲ್ಲೆಯ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಚೆಕ್ ವಿತರಣಾ ಸಮಾರಂಭದಲ್ಲಿ ಚೆಕ್ ವಿತರಿಸಿ ಮಾತನಾಡಿದರು.
ಜಿಲ್ಲಾಡಳಿತ, ಪೊಲೀಸ್ ಇಲಾಖೆ, ವೈದ್ಯರು, ನರ್ಸ್ಗಳು ಮುಂತಾದವರು ಕೋವಿಡ್-19 ನಿಯಂತ್ರಣಕ್ಕಾಗಿ ಶ್ರಮಿಸುತ್ತಿದ್ದಾರೆ. ಈ ಪೈಕಿ ಆಶಾ ಕಾರ್ಯಕರ್ತೆಯರ ಪಾತ್ರ ಮಹತ್ವವಾದುದು. ತಮ್ಮ ಜೀವದ ಹಂಗು ತೊರೆದು 24 ಗಂಟೆಗಳ ಕೆಲಸ ಮಾಡುತ್ತಿದ್ದಾರೆ ಎಂದು ಮೆಚ್ಚುಗೆಯ ಮಾತುಗಳನ್ನಾಡಿದರು.
ರಾಜ್ಯದ 17 ಜಿಲ್ಲೆಗಳಲ್ಲಿ ಈಗಾಗಲೇ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನದ ಚೆಕ್ ನೀಡಲಾಗಿದ್ದು, ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ 42,680 ಆಶಾ ಕಾರ್ಯಕರ್ತೆಯರಿಗೆ ತಲಾ ರೂ.3 ಸಾವಿರ ಪ್ರೋತ್ಸಾಹ ಧನ ನೀಡಲಾಗುತ್ತಿದ್ದು, ಒಟ್ಟು ರೂ.18 ಕೋಟಿ 7ವರೆ ಲಕ್ಷ ರೂಪಾಯಿ ಖರ್ಚು ಮಾಡಲಾಗುತ್ತದೆ ಎಂದಿದ್ದಾರೆ.