Publish Date: Wed, 10 Aug 2022 (15:52 IST)
Updated Date: Wed, 10 Aug 2022 (15:54 IST)
ಉನ್ನತ ಶಿಕ್ಷಣದ ಹುಳುಕು ಹೊರ ಬಂದಾವೆಂಬ ಭಯವೇ? ನನ್ನಲ್ಲೂ ದಾಖಲೆಗಳಿವೆ. ಬಿಚ್ಚಿದರೆ ಅವೇ ʼಸರ್ಟಿಫಿಕೇಟ್ ಕೋರ್ಸ್ʼಗಿಂತ ಬೃಹತ್ ಚಾಪ್ಟರ್ 1, ಚಾಪ್ಟರ್ 2, ಚಾಪ್ಟರ್ 3 ಆಗುತ್ತವೆ; ಬಿಚ್ಚಲೇ? ಎಂಬುದಾಗಿ ಸಚಿವ ಅಶ್ವತ್ಥನಾರಾಯಣ ವಿರುದ್ಧ, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಸ್ಪೋಟಕ ಬಾಂಬ್ ಸಿಡಿಸಿದ್ದಾರೆ. ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಅವರು, ಡಾ.ಅಶ್ವತ್ಥನಾರಾಯಣ ಅಲಿಯಾಸ್ ನಕಲಿ ಸರ್ಟಿಫಿಕೇಟ್ ರಾಜ, ನಕಲಿ ಸರ್ಟಿಫಿಕೇಟ್ ಶೂರʼ ನನ್ನನ್ನು ಹುಡುಕುತ್ತಿದ್ದಾರೆ. ಎಲ್ಲಿದ್ಯಪ್ಪ ಕುಮಾರಸ್ವಾಮಿ? ಎಂದು ಕೇಳಿದ್ದಾರೆ. ಸದನದಲ್ಲೂ ಕಾಣಿಸಿಲ್ಲವಂತೆ, ರಾಮನಗರದಲ್ಲೂ ಕಂಡಿಲ್ಲವಂತೆ. ಕಣ್ಣಿಗೆ ಕಾಮಾಲೆ ಬಂದಿರಬೇಕು, ಜಾಣ ಕುರುಡಿರಬೇಕು ಎಂದು ಕಿಡಿಕಾರಿದ್ದಾರೆ. ಕಲಾಪವೆಂದರೆ ಮೈ ಬೆಚ್ಚಗಾಗುತ್ತಾ ಉನ್ನತ ಶಿಕ್ಷಣ ಸಚಿವರೇ? ನಿಮ್ಮ ಕೌಶಲ್ಯತೆ ಗೊತ್ತಿದೆ. ಅಕ್ರಮ ಮುಚ್ಚಿಕೊಳ್ಳಲು ಅಕ್ರಮದ ದಾಖಲೆಗಳಿದ್ದ ಬಿಬಿಎಂಪಿ ಕಟ್ಟಡಕ್ಕೇ ಬೆಂಕಿ ಹಾಕಿಸಿದ್ದಾ? ಆಪರೇಷನ್ ಕಮಲದಲ್ಲೂ ಕುಶಲತೆ? ಕೋಟಿ ಕೋಟಿ ಹಣ ತುಂಬಿಸಿಕೊಂಡು ಹೋಗಿ ಶಾಸಕರ ಮನೆಗಳಲ್ಲಿ ಇಟ್ಟು ಬರುವುದಾ? ಕೌಶಲ್ಯ ಮಂತ್ರಿಯಾಗಿದ್ದಕ್ಕೂ ಸಾರ್ಥಕ ಎಂದು ವ್ಯಂಗ್ಯವಾಡಿದ್ದಾರೆ.