ಇಲ್ಲಿನ ಹೇರಳಕಟ್ಟೆ ಬಳಿ ಇರುವ ಕ್ರಿಶ್ಚಿಯನ್ ಸಮುದಾಯದ ಪ್ರಾರ್ಥನಾ ಮಂದಿರವೊಂದರ ಮೇಲೆ ಕಿಡಿಗೇಡಿಗಳು ನಿನ್ನೆ ರಾತ್ರಿ ದಾಳಿ ನಡೆಸಿದ್ದು, ಕಟ್ಟಡದ ಕಿಟಕಿ ಗಾಜುಗಳನ್ನು ಹೊಡೆದು ಪುಡಿಪುಡಿ ಮಾಡಿರುವ ಪ್ರಕರಣ ಇಂದು ಬೆಳಕಿಗೆ ಬಂದಿದೆ.
ನಿನ್ನೆರಾತ್ರಿ ಸರಿ ಸುಮಾರು 12 ಗಂಟೆ ವೇಳೆಯಲ್ಲಿ ದಾಳಿ ನಡೆಸಿರುವ ದುಷ್ಕರ್ಮಿಗಳು, ಪ್ರಾರ್ಥನಾ ಮಂದಿರದ ಕಿಟಕಿಗಾಜುಗಳನ್ನು ಕಲ್ಲುಗಳಿಂದ ಹೊಡೆದು ಪುಡಿಪುಡಿ ಮಾಡಿದ್ದಾರೆ. ಪ್ರಕರಣವು ಇಂದು ಬೆಳಗ್ಗೆ ಬೆಳಕಿಗೆ ಬಂದಿದ್ದು, ಘಟನಾ ಸ್ಥಳಕ್ಕೆ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ನಗರದ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಿಶೀಲಿಸುತ್ತಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಈ ಹಿಂದೆಯೂ ಕೂಡ ಇಲ್ಲಿನ ಚರ್ಚ್ಗಳ ಮೇಲೆ ದಾಳಿ ನಡೆಸಲಾಗಿತ್ತು.