Publish Date: Wed, 19 Dec 2018 (18:54 IST)
Updated Date: Wed, 19 Dec 2018 (18:55 IST)
ಸಾರ್ವಜನಿಕರಲ್ಲಿ ತಂಬಾಕು ದುಷ್ಪರಿಣಾಮ ಕುರಿತು ಅರಿವು ಮೂಡಿಸಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಜಿಲ್ಲಾ ತಂಬಾಕು ನಿಯಂತ್ರಣ ವಿಶೇಷ ತಂಡದಿಂದ ತಂಬಾಕು ದಾಳಿ ನಡೆಸಲಾಯಿತು.
“ಧೂಮಪಾನ ಮುಕ್ತ ನಗರ” ವೆಂದು ಘೋಷಿಸುವ ಹಾಗೂ ಸಾರ್ವಜನಿಕರಲ್ಲಿ ತಂಬಾಕು ದುಷ್ಪರಿಣಾಮ ಕುರಿತು ಅರಿವು ಮೂಡಿಸಲು ನಗರದ ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಜಿಲ್ಲಾ ತಂಬಾಕು ನಿಯಂತ್ರಣ ವಿಶೇಷ ತಂಡದಿಂದ ತಂಬಾಕು ದಾಳಿ ನಡೆಸಲಾಯಿತು.
ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಬಾಲ ಕಾರ್ಮಿಕರ ಯೋಜನೆ, ಮಹಾನಗರ ಪಾಲಿಕೆ, ಶಿಕ್ಷಣ ಇಲಾಖೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಹಾಗೂ ಪೊಲೀಸ್ ಇಲಾಖೆ ಇವರ ಸಹಯೋಗದೊಂದಿಗೆ ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿತ್ತು. ದಾವಣಗೆರೆ ಅಪರ ಜಿಲ್ಲಾಧಿಕಾರಿ ಪದ್ಮಾ ಬಸವಂತಪ್ಪ ನೇತೃತ್ವದಲ್ಲಿ ತಂಡ ರಚಿಸಿಕೊಂಡು ಸಿಗರೇಟು ಮತ್ತು ಇತರ ತಂಬಾಕು ಉತ್ಪನ್ನಗಳ ಅಧಿನಿಯಮ-2003 ಸೆಕ್ಷನ್ 4 ಮತ್ತು 6ಎ ಅಡಿಯಲ್ಲಿ ಆರೋಗ್ಯ ಇಲಾಖೆ, ಮಹಾನಗರಪಾಲಿಕೆ ವತಿಯಿಂದ ಒಟ್ಟು 53 ಪ್ರಕರಣಗಳನ್ನು ದಾಖಲಿಸಿ, ರೂ. 5550/- ಗಳನ್ನು ದಂಡದ ರೂಪದಲ್ಲಿ ಸ್ಥಳದಲ್ಲಿಯೇ ಸಂಗ್ರಹಿಸಲಾಯಿತು.
ತಂಡವು ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಹೊಟೇಲ್, ಬಾರ್ ಮತ್ತು ರೆಸ್ಟೋರೆಂಟ್, ಪಾನ್ಶಾಪ್, ಬಸ್ ನಿಲ್ದಾಣ ಇತ್ಯಾದಿ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನು ಮಾರುವವರು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನು ಸೇವಿಸುವವವರಿಗೆ ಸ್ಥಳದಲ್ಲಿಯೇ ದಂಡ ಹಾಕುವ ಮೂಲಕ ಜಾಗೃತಿ ಮೂಡಿಸಿದರು.