Publish Date: Thu, 09 Dec 2021 (15:58 IST)
Updated Date: Thu, 09 Dec 2021 (16:03 IST)
ಭಾರತೀಯ ಕೃಷಿ ಅನುಸಂಧಾನ ಪರಿಷತ್ತು 2020-21ನೇ ಸಾಲಿನಲ್ಲಿ ಕೃಷಿ ಮತ್ತು ಅದಕ್ಕೆ ಸಂಬಂಧಿಸಿದ ರಾಷ್ಟ್ರದ 67 ಕೃಷಿ ವಿಶ್ವವಿದ್ಯಾನಿಲಯಗಳ ಶಿಕ್ಷಣ, ಸಂಶೋಧನೆ, ವಿಸ್ತರಣೆ, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಾಧಿಸಿದ ಗಣನೀಯ ಸೇವೆಯನ್ನು ಮೌಲ್ಯಮಾಪನ ಮಾಡಿ ಕೃಷಿ ವಿಶ್ವವಿದ್ಯಾನಿಲಯಗಳನ್ನು ಶ್ರೇಣಿಕರಿಸಿದೆ.ಬೆಂಗಳೂರು ಕೃಷಿ ವಿವಿ ದಕ್ಷಿಣ ಭಾರತ ಮತ್ತು ರಾಜ್ಯದ ಕೃಷಿ ವಿಶ್ವವಿದ್ಯಾನಿಲಯಗಳಲ್ಲಿ ಪ್ರಥಮ ಸ್ಥಾನ ಪಡೆದಿದೆ. ರಾಷ್ಟ್ರಮಟ್ಟದ ರಾಜ್ಯ ಕೃಷಿ ವಿಶ್ವವಿದ್ಯಾನಿಲಯಗಳಲ್ಲಿ 3ನೇ ಸ್ಥಾನದಲ್ಲಿದೆ.
ಭಾರತೀಯ ಕೃಷಿ ಅನುಸಂಧಾನ ಪರಿಷತ್ತು ರಾಷ್ಟ್ರ ಮಟ್ಟದಲ್ಲಿ ಕೃಷಿ ಮತ್ತು ಸಂಬಂಧಿಸಿದ ವಿಶ್ವವಿದ್ಯಾನಿಲಯಗಳ ಗುಣಮಟ್ಟವನ್ನು ಹೆಚ್ಚಿಸಲು ಹಾಗೂ ಜಾಗತಿಕ ಮಟ್ಟದಲ್ಲಿ ಉತ್ತಮ ಶ್ರೇಯಾಂಕ ಪಡೆಯುವ ನಿಟ್ಟಿನಲ್ಲಿ ಛಾಪನ್ನು ಮೂಡಿಸಲು ಕೃಷಿ ಮತ್ತು ಸಂಬಂಧಿಸಿದ ವಿಶ್ವವಿದ್ಯಾನಿಲಯಗಳಿಗೆ ಶ್ರೇಯಾಂಕವನ್ನು ನೀಡುತ್ತಿದೆ.
ಶ್ರೇಯಾಂಕವು ವಿದ್ಯಾರ್ಥಿಗಳು ಅತ್ಯುತ್ತಮ ಕೃಷಿ ವಿಶ್ವವಿದ್ಯಾನಿಲಯಗಳನ್ನು ಆಯ್ಕೆಮಾಡಿಕೊಳ್ಳಲು ಮತ್ತು ಕೃಷಿ ವಿಶ್ವವಿದ್ಯಾನಿಲಯಗಳು ಸ್ವಯಂ-ಮೌಲ್ಯಮಾಪನ ಮಾಡಿ ಗುಣಮಟ್ಟ ಮತ್ತು ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳುವಲ್ಲಿ ಸಹಾಯವಾಗುತ್ತದೆ. ಕೃಷಿ ವಿಶ್ವವಿದ್ಯಾನಿಲಯಗಳ ನಡುವೆ ಆರೋಗ್ಯಕರ ಸ್ಪರ್ಧೆಯನ್ನು ಏರ್ಪಡಿಸಿ ಕಾರ್ಯಕ್ಷಮತೆಯನ್ನು ಹೆಚ್ಚಿಸುವಲ್ಲಿ ಮಹತ್ತರವಾದ ಪಾತ್ರವಹಿಸುತ್ತದೆ.