Publish Date: Mon, 24 Oct 2022 (13:35 IST)
Updated Date: Mon, 24 Oct 2022 (13:38 IST)
ನಗರದಲ್ಲಿ ಪ್ರತಿ ಮಳೆ ಬಂದಾಗಲೂ ರಸ್ತೆ ಗುಂಡಿಗಳ ಸಮಸ್ಯೆ ಹೆಚ್ಚುತ್ತಿದೆ. ಮಳೆ ನಿಂತ ಕೂಡಲೇ ರಸ್ತೆ ಗುಂಡಿಗಳನ್ನು ಮುಚ್ಚುವ ಕೆಲಸವನ್ನು ಬಿಬಿಎಂಪಿ ಮಾಡುತ್ತಿದ್ದರೂ ಮತ್ತೆ ಮಳೆ ಬಂದಾಗ ಮುಚ್ಚಿದ ಗುಂಡಿಗಳು ಬಾಯ್ತೆರೆಯುತ್ತಿದ್ದು, ಪಾಲಿಕೆಯು ಗುಣಮಟ್ಟದ ಕೆಲಸ ಮಾಡುತ್ತಿದೆಯೋ ಇಲ್ಲವೋ ಎಂಬುದು ಅನುಮಾನಕ್ಕೆ ಎಡೆ ಮಾಡಿಕೊಡುತ್ತಿದೆ. ಜೊತೆಗೆ ಮಳೆ ನಿಲ್ಲದೆ ರಸ್ತೆ ಗುಂಡಿಗಳಿಗೆ ಮುಕ್ತಿ ಕೊಡಲು ಅಸಾಧ್ಯವೆಂಬುದು ಎಂದು ಪಾಲಿಕೆ ಮೂಲಗಳು ತಿಳಿಸಿವೆ. ರಸ್ತೆ ಗುಂಡಿಗಳ ಮುಚ್ಚುವ ವಿಚಾರದಲ್ಲಿ ಬಿಬಿಎಂಪಿಯನ್ನು ರಾಜ್ಯ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದ್ದರ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿದ್ದ ಪಾಲಿಕೆಯು ಮೇ ತಿಂಗಳಿನಿಂದ ಈವರೆಗೆ ಸುಮಾರು 27,200ಕ್ಕೂ ಹೆಚ್ಚು ಗುಂಡಿಗಳನ್ನು ಗುರುತಿಸಿತ್ತು. ಈ ಪೈಕಿ ಈಗಾಗಲೇ 20 ಸಾವಿರಕ್ಕೂ ಹೆಚ್ಚು ಗುಂಡಿಗಳನ್ನು ಮುಚ್ಚಿರುವ ಲೆಕ್ಕಾಚಾರ ಬಿಬಿಎಂಪಿಯದ್ದು. ಪಾಲಿಕೆಯ ರಸ್ತೆ ಮತ್ತು ಮೂಲಸೌಕರ್ಯ ವಿಭಾಗದ ಅಧಿಕಾರಿಗಳ ಪ್ರಕಾರ ಆಗಸ್ಟ್ ತಿಂಗಳಲ್ಲಿ ರಸ್ತೆ ಗುಂಡಿಗಳ ಸಂಖ್ಯೆ 7 ಸಾವಿರಕ್ಕಿಂತಲೂ ಕಡಿಮೆಯಾಗಿತ್ತು ಆದರೆ, ಸೆಪ್ಟೆಂಬರ್ ಮತ್ತು ಅಕ್ಟೋಬರ್ನಲ್ಲಿ ನಿರಂತರವಾಗಿ ಮಳೆ ಸುರಿದ ಪರಿಣಾಮ ನಗರದಲ್ಲಿ ಮತ್ತೆ ಮುಚ್ಚಿದ್ದ ಗುಂಡಿಗಳು ಸಹ ಬಾಯ್ತೆರೆದಿದ್ದು, ಪ್ರಸ್ತುತ 18 ಸಾವಿರಕ್ಕೂ ಅಧಿಕ ಗುಂಡಿಗಳಾಗಿವೆ.