Publish Date: Sun, 30 Aug 2026 (16:39 IST)
Updated Date: Sun, 30 Aug 2026 (16:45 IST)
ಕೊಪ್ಪಳ: ಜಗತ್ತಿನಲ್ಲಿ ಇಸ್ಲಾಂ ಧರ್ಮವು ಅತ್ಯಂತ ಶ್ರೇಷ್ಠ ಹಾಗೂ ವೈಜ್ಞಾನಿಕವಾದ ಧರ್ಮವಾಗಿದ್ದು, ತಮಗೂ ಒಮ್ಮೆ ಮಕ್ಕಾ-ಮದೀನಾಗೆ ತೆರಳಿ ಹಜ್ ಯಾತ್ರೆ ಮಾಡುವ ಆಸೆಯಿದೆ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಹಾಗೂ ಶಾಸಕ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.
ಕೊಪ್ಪಳದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಇಸ್ಲಾಂ ಧರ್ಮದ ತತ್ವಗಳು ಮತ್ತು ವಿಚಾರಗಳನ್ನು ಮುಕ್ತವಾಗಿ ಶ್ಲಾಘಿಸಿದರು. "ಜಗತ್ತಿನಲ್ಲಿ ಇಸ್ಲಾಂ ಅತ್ಯಂತ ಶ್ರೇಷ್ಠ ಧರ್ಮವಾಗಿದೆ. ಈ ಧರ್ಮದಲ್ಲಿರುವ ನಿಯಮಗಳು ಮತ್ತು ಆಚರಣೆಗಳು ವೈಜ್ಞಾನಿಕ ಹಿನ್ನೆಲೆಯನ್ನು ಹೊಂದಿವೆ. ನಾನು ವೈಯಕ್ತಿಕವಾಗಿ ಯಾವುದೇ ದೇವಾಲಯಗಳಿಗೆ ಹೆಚ್ಚಾಗಿ ಹೋಗುವುದಿಲ್ಲ, ಆದರೆ ನನಗೆ ಇಸ್ಲಾಂ ಧರ್ಮದ ಪವಿತ್ರ ಕ್ಷೇತ್ರವಾದ ಹಜ್ಗೆ ಹೋಗಬೇಕು ಎಂಬ ಆಸೆಯಿದೆ" ಎಂದು ತಮ್ಮ ಮನದಾಳದ ಇಚ್ಛೆಯನ್ನು ವ್ಯಕ್ತಪಡಿಸಿದರು.
ಇದೇ ವೇಳೆ, ಮಹಮ್ಮದ್ ಪೈಗಂಬರರ ಬೋಧನೆಗಳು ಹಾಗೂ ಇಸ್ಲಾಂ ಧರ್ಮವು ಸಾರುವ ಸಮಾನತೆ ಮತ್ತು ಸಹೋದರತ್ವದ ಸಂದೇಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ರಾಯರೆಡ್ಡಿ ಅಭಿಪ್ರಾಯಪಟ್ಟರು.
ಕಾಂಗ್ರೆಸ್ನ ಹಿರಿಯ ನಾಯಕರಾಗಿರುವ ಬಸವರಾಜ ರಾಯರೆಡ್ಡಿ ಅವರ ಈ ಹೇಳಿಕೆಯು ಈಗ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಸಾರ್ವಜನಿಕರಲ್ಲಿ ವಿಭಿನ್ನ ಪ್ರತಿಕ್ರಿಯೆಗಳಿಗೆ ಕಾರಣವಾಗಿದೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ